ಬೆಂಗಳೂರು: ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ನೀಡಲಾಗುತ್ತಿದ್ದ ರಾಜಾತಿಥ್ಯ ಹಾಗೂ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ವರ್ಷಾನುಗಟ್ಟಲೆ ಒಂದೇ ಜೈಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡುವ ಮೂಲಕ ಜೈಲು ವ್ಯವಸ್ಥೆಯನ್ನು ಶುದ್ಧೀಕರಿಸಲು ಇಲಾಖೆ ಮುಂದಾಗಿದೆ.
ಜೈಲು ಸಿಬ್ಬಂದಿ ಹಣ ಪಡೆದು ಖೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮಕ್ಕೆ ಮುಂದಾಗಲಾಗಿದೆ. ವಿಶೇಷವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದ ಬೆಳವಣಿಗೆಗಳು ಡಿಜಿಪಿ ಅಲೋಕ್ ಕುಮಾರ್ ಅವರ ಗಮನ ಸೆಳೆದಿವೆ.
ಇದೇ ತಿಂಗಳ 9ರಿಂದ ಕೇಂದ್ರ ಕಾರಾಗೃಹ ಕಚೇರಿಯಲ್ಲಿ ಜೈಲು ಸಿಬ್ಬಂದಿಗೆ ಕೌನ್ಸೆಲಿಂಗ್ ನಡೆಸಿ, ಹಂತ ಹಂತವಾಗಿ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಮುಹೂರ್ತ ನಿಗದಿಪಡಿಸಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ವರ್ಷಗಳಿಂದ ಒಂದೇ ಕಡೆ ನಿಯೋಜನೆಗೊಂಡಿರುವ ಸಿಬ್ಬಂದಿಗಳ ಮೇಲೆ ವಿಶೇಷ ನಿಗಾ ವಹಿಸಲಾಗಿದೆ.
ಇನ್ನು ಬೇರೆ ಜೈಲುಗಳಿಂದ OOD (ಔಟ್ ಆಫ್ ಡಿಪ್ಯುಟೇಶನ್) ಮೇಲೆ ಬಂದಿರುವ ಅಧಿಕಾರಿಗಳಿಗೂ ವರ್ಗಾವಣೆಯ ಭೀತಿ ಎದುರಾಗುವ ಸಾಧ್ಯತೆ ಇದೆ. ಸಿಬ್ಬಂದಿಗಳನ್ನು ನಿಯಮಿತವಾಗಿ ಬದಲಾವಣೆ ಮಾಡುವುದರಿಂದ ಜೈಲುಗಳ ಒಳಗಿನ ಅಕ್ರಮ ಜಾಲವನ್ನು ಮುರಿಯಬಹುದು ಹಾಗೂ ಶಿಸ್ತಿನ ಆಡಳಿತ ವ್ಯವಸ್ಥೆ ಜಾರಿಗೊಳಿಸಬಹುದು ಎಂಬುದು ಡಿಜಿಪಿ ಅವರ ಉದ್ದೇಶವಾಗಿದೆ.
ಅಲೋಕ್ ಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಜೈಲುಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳು ಜಾರಿಯಾಗುತ್ತಿದ್ದು, ಈ ಸರಣಿ ವರ್ಗಾವಣೆಗಳು ಜೈಲು ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ನಿರೀಕ್ಷೆ ಮೂಡಿಸಿದೆ.



