ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪೊಲೀಸರನ್ನು ಪ್ರಶ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಆದರೆ ಕೋರ್ಟ್ ಆದೇಶದ ನಂತರವೂ ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸರನ್ನು ನಿಂದಿಸಿದ್ದಕ್ಕಾಗಿ ಪುನೀತ್ ಕೆರೆಹಳ್ಳಿಗೆ ನ್ಯಾಯಾಲಯ ತೀವ್ರ ಎಚ್ಚರಿಕೆ ನೀಡಿದೆ.
ಚನ್ನಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೇಸ್ ರದ್ದತಿಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಪ್ರಕರಣದಲ್ಲಿ ಪೊಲೀಸರ ನಡೆಗೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿ, ತಾತ್ಕಾಲಿಕ ತಡೆ ನೀಡಿತು.
ಆದರೆ ಇದೇ ವೇಳೆ, ನಿನ್ನೆ ಕೋರ್ಟ್ ತಡೆ ನೀಡಿದ ನಂತರ ಪುನೀತ್ ಕೆರೆಹಳ್ಳಿ ಫೇಸ್ಬುಕ್ ಮತ್ತು ರೀಲ್ಸ್ ಮೂಲಕ ಪೊಲೀಸರ ವಿರುದ್ಧ ಹೇಳಿಕೆ ನೀಡಿರುವುದನ್ನು ಹೆಚ್ಚುವರಿ ಎಸ್ಪಿಪಿ ಬಿ.ಎನ್. ಜಗದೀಶ್ ನ್ಯಾಯಾಲಯದ ಗಮನಕ್ಕೆ ತಂದರು.
ಈ ಬಗ್ಗೆ ಕಠಿಣವಾಗಿ ಪ್ರತಿಕ್ರಿಯಿಸಿದ ನ್ಯಾಯಾಲಯ, “ಸಬ್ ಜುಡೀಸ್ ಪ್ರಕರಣದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾತನಾಡುವುದು ಸರಿಯಲ್ಲ. ರೀಲ್ಸ್, ಲೈಕ್ಗಳಿಗಾಗಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ”
ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿತು.
ನ್ಯಾಯಾಲಯವು ಬಾಕಿ ಪ್ರಕರಣದ ಬಗ್ಗೆ ಯಾವುದೇ ಸಾಮಾಜಿಕ ಜಾಲತಾಣ ಪೋಸ್ಟ್ ಮಾಡದಂತೆ ಸೂಚಿಸಿ, ಡಿಸಿಪಿ ಮುಂದೆ ಹಾಜರಾಗಿ ಬಾಂಡ್ ಸಲ್ಲಿಸುವಂತೆ ಪುನೀತ್ ಕೆರೆಹಳ್ಳಿಗೆ ಆದೇಶ ನೀಡಿದೆ. ಅಕ್ರಮ ವಲಸಿಗರ ಬಗ್ಗೆ ಮಾತನಾಡುವುದೇ ತಪ್ಪಲ್ಲ, ಆದರೆ ಅದರ ಶೈಲಿ ಮತ್ತು ವಿಧಾನ ಕಾನೂನಿನ ಚೌಕಟ್ಟಿನಲ್ಲಿ ಇರಬೇಕು ಎಂದು ಹೈಕೋರ್ಟ್ ಸ್ಪಷ್ಟ ಸಂದೇಶ ನೀಡಿದೆ.



