ರಾಮನಗರ: ಅಬಕಾರಿ ಸಚಿವರ ರಾಜೀನಾಮೆಗೆ ವಿಪಕ್ಷಗಳು ಆಗ್ರಹ ಮಾಡುತ್ತಿರುವುದಕ್ಕೆ ಯಾವುದೇ ಸೂಕ್ತ ದಾಖಲೆ ಇಲ್ಲ. ಹೀಗಾಗಿ ಸಚಿವರು ರಾಜೀನಾಮೆ ಕೊಡುವ ಅಗತ್ಯವೇ ಇಲ್ಲ ಎಂದು ಶಾಸಕ ಹೆಚ್.ಸಿ. ಬಾಲಕೃಷ್ಣ ಸ್ಪಷ್ಟಪಡಿಸಿದ್ದಾರೆ.
ಬಿಡದಿ ತಾಲೂಕಿನ ರಾಮನಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಬಕಾರಿ ಇಲಾಖೆಯನ್ನು ನಿರ್ವಹಿಸಿದ ಪ್ರತಿಯೊಬ್ಬ ಸಚಿವರ ಮೇಲೂ ಈ ರೀತಿಯ ಆರೋಪಗಳು ಕೇಳಿಬಂದಿವೆ. ಆದರೆ ಇದುವರೆಗೆ ಯಾವುದೇ ಸಚಿವರು ಈ ಆರೋಪಗಳ ಹಿನ್ನೆಲೆ ರಾಜೀನಾಮೆ ನೀಡಿದ ಉದಾಹರಣೆ ಇಲ್ಲ. ಬಿಜೆಪಿಯವರು ಸರ್ಕಾರದ ಒಂದು ವಿಕೆಟ್ ಉರುಳಿಸಲು ಕಸರತ್ತು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಯಾರೋ ಮಾತನಾಡಿರುವ ಆಡಿಯೋ ಒಂದನ್ನು ಹಿಡಿದುಕೊಂಡು ರಾಜೀನಾಮೆ ಕೇಳುವುದು ಸರಿಯಲ್ಲ. ಸೂಕ್ತ ಆಧಾರ, ಮಾಹಿತಿ ಇಲ್ಲದೇ ಆರೋಪ ಮಾಡುವುದಕ್ಕೆ ಅರ್ಥವೇ ಇಲ್ಲ. ಈ ವಿಚಾರಕ್ಕೆ ಸಂಬಂಧಿಸಿ ಅಬಕಾರಿ ಸಚಿವರು ಸದನದಲ್ಲೇ ಸ್ಪಷ್ಟ ಉತ್ತರ ನೀಡಿದ್ದಾರೆ ಎಂದು ಬಾಲಕೃಷ್ಣ ಹೇಳಿದರು. ಇನ್ನೂ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಸದ್ಯ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಇಲ್ಲ. ಹೈಕಮಾಂಡ್ ಕೆಲ ನಾಯಕರನ್ನು ಕರೆಸಿರುವ ಮಾತು ಕೇಳಿಬಂದಿದೆ, ಏನಾಗುತ್ತೋ ಮುಂದೇ ನೋಡಬೇಕು ಎಂದು ತಿಳಿಸಿದರು.
ಕನಕೋತ್ಸವದ ಹೆಸರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಶಕ್ತಿ ಪ್ರದರ್ಶನ ಮಾಡಿದ್ದಾರೆ ಎಂಬ ಆರೋಪವನ್ನು ತಳ್ಳಿಹಾಕಿದ ಅವರು, ಡಿಕೆಶಿ ಮೇಲಿನ ವಿಶ್ವಾಸದಿಂದ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಎಲ್ಲ ಶಾಸಕರಿಗೂ ಆಹ್ವಾನ ನೀಡಲಾಗಿತ್ತು. ಕೆಲವರು ಕೆಲಸದ ಒತ್ತಡದಿಂದ ಬರಲಿಲ್ಲ, ಹಲವರು ಬಂದು ಭಾಗವಹಿಸಿದ್ದಾರೆ. ಇದರಲ್ಲಿ ಶಕ್ತಿ ಪ್ರದರ್ಶನ ಎನ್ನುವುದಕ್ಕೆ ಅರ್ಥವೇ ಇಲ್ಲ ಎಂದು ಹೇಳಿದರು.
ಡಿಕೆಶಿ ಇಡೀ ರಾಜ್ಯದ ಡಿಸಿಎಂ. ಅವರ ಆಹ್ವಾನಕ್ಕೆ ಶಾಸಕರು ಬಂದು ಗೌರವ ಕೊಟ್ಟಿದ್ದಾರೆ. ಸಿಎಂ ಬದಲಾವಣೆ ಕುರಿತು ತೀರ್ಮಾನ ಹೈಕಮಾಂಡ್ ಕೈಯಲ್ಲಿದೆ. ನಾನು ಸಿಎಂ ಹಾಗೂ ಡಿಸಿಎಂ ಇಬ್ಬರ ಜೊತೆಯಲ್ಲೂ ಉತ್ತಮ ಸಂಬಂಧ ಹೊಂದಿದ್ದೇನೆ. ಇನ್ನೂ ಡಿಕೆಶಿ ನಮ್ಮ ಜಿಲ್ಲೆಯವರೇ. ಅವರು ಸಿಎಂ ಆಗಬೇಕು ಎಂಬ ಅಭಿಪ್ರಾಯ ಇದೆ. ಆದರೆ ಅದು ಯಾವಾಗ ಎನ್ನುವುದನ್ನು ಹೈಕಮಾಂಡ್ ನಿರ್ಧರಿಸಬೇಕು. ಡಿಕೆಶಿ ಸಾಕಷ್ಟು ಶ್ರಮಪಟ್ಟಿದ್ದಾರೆ, ದುಡಿದಿದ್ದಾರೆ. ಹೀಗಾಗಿ ಹಳೆ ಮೈಸೂರು ಭಾಗದವರ ಒತ್ತಡ ಹೆಚ್ಚಾಗಿದೆ. ಈ ವಿಚಾರವನ್ನು ಹೈಕಮಾಂಡ್ ಬಗೆಹರಿಸಬೇಕು, ಇಲ್ಲವಾದರೆ ಸಮಸ್ಯೆ ಉಂಟಾಗಬಹುದು ಎಂದು ಶಾಸಕ ಹೆಚ್.ಸಿ. ಬಾಲಕೃಷ್ಣ ಎಚ್ಚರಿಸಿದರು.



