ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ರೋಣ ತಾಲೂಕಿನ ಜಿಗಳೂರ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತವು ಇಡೀ ತಾಲೂಕನ್ನೇ ಶೋಕದಲ್ಲಿ ಮುಳುಗಿಸಿದೆ. ಕೂಲಿ ಕೆಲಸಕ್ಕಾಗಿ ತೆರಳುತ್ತಿದ್ದ ಕಾರ್ಮಿಕರನ್ನು ಹೊತ್ತ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಈ ದುರ್ಘಟನೆಯಲ್ಲಿ ಮೂವರು ಕಾರ್ಮಿಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಗಜೇಂದ್ರಗಡದಿಂದ ರೋಣದತ್ತ ಸಾಗುತ್ತಿದ್ದ ಕ್ರೂಸರ್ ವಾಹನಕ್ಕೆ, ನಿಯಂತ್ರಣ ತಪ್ಪಿದ ಕ್ಯಾಂಟರ್ ಅಪ್ಪಳಿಸಿದ ಪರಿಣಾಮ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿ ರಸ್ತೆ ಮೇಲೆ ತಿರುಗಿಬಿದ್ದಿತ್ತು. ವಿಷಯ ತಿಳಿದ ರೋಣ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಶುಕ್ರವಾರ ಸಂಜೆ ಗಜೇಂದ್ರಗಡ ಪಟ್ಟಣದ ಶಿವಾಜಿ ಪೇಟೆ ಹಾಗೂ ವಾಜಪೇಯಿ ನಗರದಲ್ಲಿರುವ ಮೃತರಾದ ಮರಿಮಬ ಹುನಗುಂದ, ಅನ್ನಪೂರ್ಣ ಬಾಗೋಜಿ, ಸುಜಾತಾ ಹೊಸಮನಿ ಅವರ ನಿವಾಸಗಳಿಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ದುಡಿಮೆಗಾಗಿ ಹೊರಟ ಬಡ ಕಾರ್ಮಿಕರ ಜೀವ ಹೀಗೆ ರಸ್ತೆಯಲ್ಲಿ ಕಳೆದು ಹೋಗುವುದು ನೋವಿನ ಸಂಗತಿ. ಈ ನೋವನ್ನು ಸಂಪೂರ್ಣವಾಗಿ ತೀರಿಸಲಾಗದು. ಆದರೆ, ಸರ್ಕಾರ ಅವರ ಕುಟುಂಬದವರ ಬೆಂಬಲಕ್ಕೆ ನಿಲ್ಲಲಿದೆ ಎಂದು ಹೇಳಿದರು.
ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ ಪರಿಹಾರ ನೀಡಲಾಗುವುದು. ಅಗತ್ಯ ದಾಖಲೆಗಳ ಪರಿಶೀಲನೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಪರಿಹಾರದ ಧನ ಬಿಡುಗಡೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು. ಅಪಘಾತಕ್ಕೆ ಕಾರಣವಾದ ಕ್ಯಾಂಟರ್ ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸಿದ್ದಣ್ಣ ಬಂಡಿ, ಶಿವರಾಜ ಘೋರ್ಪಡೆ, ಶೇಖಪ್ಪ ರಾಮಜಿ, ರಾಜು ಸಾಂಗ್ಲಿಕರ್, ಮುರ್ತುಜಾ ಡಾಲಾಯತ, ಅರ್ಜುನ್ ರಾಠೋಡ, ಪ್ರಭು ಚವಡಿ, ಶ್ರೀಧರ ಬಿದರಳ್ಳಿ ಸೇರಿದಂತೆ ಮುಖಂಡರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಮೃತ ಕುಟುಂಬಗಳಿಗೆ ತಕ್ಷಣ ಪರಿಹಾರ ಧನ ಬಿಡುಗಡೆ ಆಗಬೇಕು. ಅಲ್ಲದೆ ಸರ್ಕಾರ ನೀಡುವ ಪರಿಹಾರವನ್ನು ಕನಿಷ್ಠ 10 ಲಕ್ಷ ರೂ.ಗಳಿಗೆ ಹೆಚ್ಚಿಸಬೇಕು. ಗಾಯಾಳುಗಳಿಗೆ 2 ಲಕ್ಷ ರೂ ನೀಡಬೇಕು. ಕೇವಲ ಸರ್ಕಾರದ ಪರಿಹಾರವಲ್ಲ, ವೈಯಕ್ತಿಕ ನೆರವಿಗೂ ಒತ್ತು ನೀಡಬೇಕು.
– ದಾವಲಸಾಬ ತಾಳಿಕೋಟಿ
ಮುಸ್ಲಿಂ ಸಮಾಜದ ಮುಖಂಡರು.



