ಕಲಬುರಗಿ: ಮೆಟ್ರೋ ಟಿಕೆಟ್ ದರಪರಿಷ್ಕರಣೆ ವಿಚಾರದಲ್ಲಿ ಬಿಜೆಪಿ ನಾಯಕ ತೇಜಸ್ವಿ ಸೂರ್ಯ ಅವರು ಕಾಂಗ್ರೆಸ್ ಸರ್ಕಾರದ ಮೇಲೆ ಅನಗತ್ಯವಾಗಿ ಆರೋಪ ಹೊರಿಸುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮೆಟ್ರೋ ದರ ಹೆಚ್ಚಳ ವಿಚಾರದಲ್ಲಿ ಬಿಜೆಪಿಯವರು ಏನಾದರೂ ಆಗುತ್ತದೆ ಎಂದು ಕಾಯುತ್ತಾ, ರಾಜ್ಯ ಸರ್ಕಾರದ ಮೇಲೆ ಹೊಣೆ ಹಾಕಲು ಪ್ರಯತ್ನಿಸುತ್ತಿದ್ದಾರೆ. ಆದರೆ ಈಗ ವಾಸ್ತವಾಂಶ ಹೊರಬಂದಿದ್ದು, ಮೆಟ್ರೋ ಟಿಕೆಟ್ ದರ ಪರಿಷ್ಕರಣೆ ಮಾಡುವ ಅಧಿಕಾರ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಕೈಯಲ್ಲಿದೆ ಎಂದರು.
ಈ ವಿಷಯದಲ್ಲಿ ರಾಜ್ಯ ಸರ್ಕಾರ ಯಾರ ಮೇಲೂ ಹೊಣೆ ಹಾಕುತ್ತಿಲ್ಲ. ಹೀಗಾಗಿ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಬಳಿ ಈ ವಿಚಾರವನ್ನು ಮುಂದಿಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಅಧಿಕೃತವಾಗಿ ಕೇಂದ್ರಕ್ಕೆ ಪತ್ರ ಬರೆದಿದ್ದು, ಮೆಟ್ರೋ ದರ ಪರಿಷ್ಕರಣೆಗೆ ಸಮಿತಿ ರಚಿಸುವಂತೆ ಮನವಿ ಮಾಡಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.



