ಹಾಸನ: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಅಭಿಮಾನಿಗಳಿರುವ ದೊಡ್ಡ ವಲಯವಿದ್ದು, ನಮ್ಮನ್ನು ಪ್ರೀತಿಸುವ ಜನರು ಆ ಕ್ಷೇತ್ರದಲ್ಲಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಕೆಲಗಳಲೆ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಜಿ.ಟಿ.ದೇವೇಗೌಡರ ಬಗ್ಗೆ ಕುಮಾರಸ್ವಾಮಿ ನೀಡಿರುವ ಹೇಳಿಕೆ ಹಾಗೂ ಚಾಮುಂಡೇಶ್ವರಿ ಕ್ಷೇತ್ರದಿಂದ ಸಾ.ರಾ. ಮಹೇಶ್ ಸ್ಪರ್ಧೆ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
“ಇವತ್ತಿನ ಕಾಲಘಟ್ಟದಲ್ಲಿ ಈ ಎಲ್ಲ ವಿಚಾರಗಳನ್ನು ಚರ್ಚೆ ಮಾಡುವುದು ಅಪ್ರಸ್ತುತ. ಏನು ಆಗಬೇಕೋ ಅದು ಕಾಲ ನಿರ್ಣಯ ಮಾಡುತ್ತದೆ. ಎಲ್ಲಕ್ಕೂ ಸಮಯ ಬರುತ್ತದೆ” ಎಂದು ನಿಖಿಲ್ ಹೇಳಿದರು.
ಸಾರ್ವಜನಿಕ ವಲಯದಲ್ಲಿ ಚುನಾಯಿತ ಪ್ರತಿನಿಧಿಗಳು ಚರ್ಚೆ ನಡೆಸಿದಾಗ ಕಾರ್ಯಕರ್ತರಲ್ಲಿ ಸ್ವಲ್ಪ ಇರುಸುಮುರುಸು ಉಂಟಾಗಿರುವುದು ಸತ್ಯ ಎಂದು ಒಪ್ಪಿಕೊಂಡ ಅವರು, “ಇಂತಹ ವಿಚಾರಗಳು ಮಾಧ್ಯಮದ ಮುಂದೆ ಮಾತನಾಡುವುದರಿಂದ ಇತ್ಯರ್ಥವಾಗುವುದಿಲ್ಲ” ಎಂದರು.
ಪಕ್ಷದ ವರಿಷ್ಠರು ಕಾರ್ಯಕರ್ತರ ಗೌರವವನ್ನು ಕಾಪಾಡಿಕೊಳ್ಳುವ ದೃಷ್ಟಿಯಿಂದ ಮತ್ತು ಕ್ಷೇತ್ರವನ್ನು ಉಳಿಸಿಕೊಳ್ಳಲು ಆಯಾ ಸಂದರ್ಭದಲ್ಲಿ ಸೂಕ್ತ ಹಾಗೂ ಉತ್ತಮ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ಪಕ್ಷದ ಕಾರ್ಯಕರ್ತನಾಗಿ ವಿಶ್ವಾಸ ವ್ಯಕ್ತಪಡಿಸಿದರು.



