ವಿಜಯಸಾಕ್ಷಿ ಸುದ್ದಿ, ಡಂಬಳ: 33 ಸಾವಿರ ಹೆಕ್ಟೇರ್ ವ್ಯಾಪ್ತಿಯ ವಿಸ್ತಾರದಲ್ಲಿ ಹಬ್ಬಿರುವ ಸಸ್ಯ ಕಾಶಿ ಕಪ್ಪತ್ತಗುಡ್ಡ ಅರಣ್ಯ ಸಂರಕ್ಷಿತ ಪ್ರದೇಶದಲ್ಲಿ 132ಕ್ಕೂ ಹೆಚ್ಚು ಭಾಗಗಳಲ್ಲಿ ಫೈರ್ಲೈನ್ (ಬೆಂಕಿ ತಡೆ ರೇಖೆ) ನಿರ್ಮಿಸುವ ಮೂಲಕ ಬೆಂಕಿ ತಡೆಗೆ ಅರಣ್ಯ ಇಲಾಖೆ ಸನ್ನದ್ಧವಾಗಿದೆ.
ಹಿರೇವಡ್ಡಟ್ಟಿ, ಡೋಣಿ, ಬಾಗೇವಾಡಿ, ಕಲಕೇರಿ, ಡಂಬಳ ಭಾಗದ ಸಂರಕ್ಷಿತ ಪ್ರದೇಶ, ಸೂಕ್ಷ್ಮ ಪ್ರದೇಶಗಳಲ್ಲಿ ವಾಟರ್ ರಸ್ತೆಗಳಲ್ಲಿ ಬೆಂಕಿ ತಡೆಗೆ ಕಪ್ಪತ್ತಗುಡ್ಡದ 5 ಶಾಖೆಗಳಲ್ಲಿ ಫೈರ್ ಲೈನ್ ನಿರ್ಮಿಸಲಾಗುತ್ತಿದೆ. ಪ್ರಾಣಿಗಳು ವಾಸವಿರುವ ಜಾಗಗಳನ್ನು ಗುರುತಿಸಿ ಪ್ರಾಣಿಗಳ ಸಂರಕ್ಷಿತ ಪ್ರದೇಶಗಳಲ್ಲಿ, ಕಪ್ಪತ್ತಗುಡ್ಡ ಫ್ಯಾನ್ಗಳ ನಿರ್ವಹಣೆಗಾಗಿ ನಿರ್ಮಾಣವಾಗಿರುವ ರಸ್ತೆ ಪಕ್ಕದ ಅರಣ್ಯ ವಲಯದಲ್ಲಿ ವಾಹನಗಳು ಸಂಚರಿಸುವ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿನ ರಸ್ತೆಗಳಲ್ಲಿ ಬೆಂಕಿ ತಡೆಯುವ ರೇಖೆ ನಿರ್ಮಿಸಲಾಗಿದೆ ಎನ್ನುತ್ತಾರೆ ಅರಣ್ಯ ಇಲಾಖೆಯ ಸಿಬ್ಬಂದಿಗಳು.
ಗದಗ ಜಿಲ್ಲಾ ಹಿರಿಯ ಅರಣ್ಯ ಅಧಿಕಾರಿ ಸಂತೋಷಕುಮಾರ ಕೆಂಚಪ್ಪನವರ ಮತ್ತು ಮುಂಡರಗಿಯ ಆರ್ಎಫ್ಓ ಮಂಜುನಾಥ ಮೇಗಲಮನಿ ವಿಶೇಷ ಅಭಿಯಾನದ ಮೂಲಕ ಜಾಗೃತಿ ಮೂಡಿಸಿ ಪರಿಸರವೇ ಮನುಷ್ಯನ ಶಕ್ತಿಯಾಗಿದೆ ಎಂದು ಸಾರಿದ್ದರಿಂದ ಅಪಾರ ಜನರ ಮೆಚ್ಚುಗೆಗೆ ಕಾರಣವಾಗಿದೆ.
ಬಾಕ್ಸ್
ಕೆಲ ಕಿಡಿಗೇಡಿಗಳು ಹರಕೆಯನ್ನು ಈಡೇರಿಸಿಕೊಳ್ಳುವ ಹಿನ್ನೆಲೆಯಲ್ಲಿ ಬೆಂಕಿ ಹಚ್ಚುವ ಮೌಢ್ಯ ಆಚರಣೆಯಷ್ಟೇ ಅಲ್ಲದೆ, ವಿವಿಧ ಕಂಪನಿಗಳು ನಿರ್ಮಿಸಿರುವ ವಿಂಡ್ ಫ್ಯಾನ್ಗಳಲ್ಲಿ ಕೆಲ ಬಾರಿ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾಗುವ ಬೆಂಕಿ ತಡೆಯಲು ನಿಗಾ ಇಡಲಾಗಿದ್ದು, ಕಪ್ಪತ್ತಗುಡ್ಡದ ಸುತ್ತಮುತ್ತಲಿನ ಗ್ರಾಮಗಳ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮತ್ತು ಪರಿಸರವಾದಿಗಳಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಇಲಾಖೆ ಮುಂದಾಗುವುದರ ಮೂಲಕ ಪರಿಸರ ಉಳಿವಿಗಾಗಿ ಅರಣ್ಯ ಸಿಬ್ಬಂದಿ ಮತ್ತು ಗುತ್ತಿಗೆ ವಾಚರ್ಗಳ ಮೂಲಕ ಮತ್ತು 2 ಡ್ರೋನ್ ಕಣ್ಗಾವಲು, ಗುಡ್ಡದ ಪ್ರಮುಖ ಭಾಗಗಳಲ್ಲಿ ಕ್ಯಾಮರಾಗಳ ಅಳವಡಿಕೆ ಮಾಡಲಾಗಿದೆ ಎಂದು ಆರ್.ಎಫ್.ಒ ಮಂಜುನಾಥ ಮೇಗಲಮನನಿ ಮಾಹಿತಿ ನೀಡಿದರು.
ಕಪ್ಪತ್ತಗುಡ್ಡದ ಉಳಿವಿಗಾಗಿ ಅರಣ್ಯ ಇಲಾಖೆ ಮಾತ್ರ ಶ್ರಮಿಸಿದರೆ ಸಾಲದು. ಪರಿಸರದ ಉಳಿವಿಗಾಗಿ ಜನತೆಯ ಸಹಕಾರ, ಪರಿಸರವಾದಿಗಳ ಕಾಳಜಿಯೊಂದಿಗೆ ಆಮ್ಲಜನಕ ಸೃಷ್ಟಿಯ ಫ್ಯಾಕ್ಟರಿ, ಜನರ ಹೃದಯದಂತಿರುವ ಸಸ್ಯಗಳ ತಾಣ ಕಪ್ಪತ್ತಗುಡ್ಡದ ಸಸ್ಯ ಸಂಪತ್ತಿನ ಉಳಿವಿಗಾಗಿ ಎಲ್ಲರೂ ಕೈಜೋಡಿಸಬೇಕಾಗಿದೆ.
-
ಸಂತೋಷಕುಮಾರ ಕೆಂಚಪ್ಪನವರ.
ಉಪ ಅರಣ್ಯ ಸಂರಕ್ಷಣಾಧಿಕಾರಿ, ಗದಗ.



