HomeGadag Newsಗ್ರಾಹಕರ ಕೈ ಸುಡುತ್ತಿದೆ ವೀಳ್ಯದೆಲೆ ಬೆಲೆ!

ಗ್ರಾಹಕರ ಕೈ ಸುಡುತ್ತಿದೆ ವೀಳ್ಯದೆಲೆ ಬೆಲೆ!

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಇದೀಗ ಮಾರುಕಟ್ಟೆಗಳಲ್ಲಿ ವೀಳ್ಯದೆಲೆಯ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿದ್ದು, ಗ್ರಾಹಕರನ್ನು ತೀವ್ರ ಸಂಕಷ್ಟಕ್ಕೆ ತಳ್ಳಿದೆ. ಪ್ರಸ್ತುತ ಒಂದು ಕಟ್ಟು ವೀಳ್ಯದೆಲೆ ಬೆಲೆ 170ರಿಂದ 200 ರೂ. ಗಡಿ ದಾಟಿದ್ದು, ಕಳೆದ ದಶಕದಲ್ಲೇ ಅಪರೂಪದ ದಾಖಲೆ ಏರಿಕೆಯಾಗಿ ಪರಿಣಮಿಸಿದೆ. ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದರಿಂದ ಬೆಳೆಗಾರರಲ್ಲಿ ಸಂತಸ ಮನೆ ಮಾಡಿದ್ದರೆ, ಗ್ರಾಹಕರಿಗೆ ಬಾಯಿ ಸುಡುವಂತೆ ಮಾಡಿದೆ.

ಕಳೆದ ಮೂರು ತಿಂಗಳಿಂದ ವೀಳ್ಯದೆಲೆ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಇತ್ತೀಚಿನ ಒಂದು ವಾರದಲ್ಲೇ ಒಂದು ಕಟ್ಟಿನ ಬೆಲೆ 50ರಿಂದ 60 ರೂ.ವರೆಗೆ ಹೆಚ್ಚಳವಾಗಿರುವುದು ಗ್ರಾಹಕರ ಮೇಲೆ ಭಾರೀ ಹೊರೆಯಾಗುತ್ತಿದೆ. ಒಂದು ಕಟ್ಟಿನಲ್ಲಿ ಸಾಮಾನ್ಯವಾಗಿ 100 ವೀಳ್ಯದೆಲೆಗಳು ಇರುತ್ತವೆ. ಆದರೆ ಪ್ರಸ್ತುತ ಮಾರುಕಟ್ಟೆಯಲ್ಲಿ ಒಂದು ವೀಳ್ಯದೆಲೆ ಸರಾಸರಿ 2 ರೂ ದರದಲ್ಲಿ ಮಾರಾಟವಾಗುತ್ತಿದೆ.

ಮದುವೆ, ಗೃಹಪ್ರವೇಶ, ಜಾತ್ರೆ, ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಶುಭ ಕಾರ್ಯಗಳಿಗೆ ಅತ್ಯವಶ್ಯವಾಗಿ ಬೇಕಾಗಿರುವ ವೀಳ್ಯದೆಲೆಯ ಬೆಲೆಯು ಬಂಗಾರದ ಬೆಲೆಯಂತೆ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಖರೀದಿಸುವ ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದೆ.

ತಾಲೂಕಿನಾದ್ಯಂತ ಅಂದಾಜು 55 ಹೆಕ್ಟೇರ್ ಪ್ರದೇಶದಲ್ಲಿ ವೀಳ್ಯದೆಲೆ ಬೆಳೆಯಲಾಗುತ್ತಿದ್ದು, ಶಾಂತಗೇರಿ, ಮುಸಿಗೇರಿ, ರುದ್ರಾಪೂರ, ಅಮರಗಟ್ಟಿ, ಗೋಗೇರಿ, ಮಾಟರಂಗಿ, ಜಿಗೇರಿ, ರಾಜೂರ, ಗುಳಗುಳಿ, ಕಲ್ಲಿಗನೂರು ಸೇರಿದಂತೆ ಹತ್ತಾರು ಗ್ರಾಮಗಳ ರೈತರು ವೀಳ್ಯದೆಲೆಯ ಕೃಷಿಯಿಂದ ಜೀವನ ನಡೆಸುತ್ತಿದ್ದಾರೆ.

ವೀಳ್ಯದೆಲೆ ದರ ಹೆಚ್ಚಾಗಲು ಹವಾಮಾನ ವೈಪರೀತ್ಯ ಕಾರಣ ಎನ್ನಲಾಗಿದೆ. ವೀಳ್ಯದೆಲೆ ತೋಟಗಳಲ್ಲಿ ಚಳಿಗೆ ಬಳ್ಳಿಗಳು ಎಲೆ ಕಟ್ಟುತ್ತಿಲ್ಲ. ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದ್ದು, ವೀಳ್ಯದೆಲೆ ದರ ಹೆಚ್ಚಾಗಿದೆ. ಯುಗಾದಿ ನಂತರದಲ್ಲಿ ಹೊಸ ಚಿಗುರು ಬರಲು ಪ್ರಾರಂಭವಾಗಿ ಇಳುವರಿ ಹೆಚ್ಚಾಗುತ್ತದೆ. ನಂತರವಷ್ಟೇ ದರ ಇಳಿಕೆಯಾಗಬಹುದು ಎನ್ನುತ್ತಾರೆ ವ್ಯಾಪಾರಿಗಳು.

ರೈತರು ಹೆಚ್ಚಿನ ಪ್ರಮಾಣದಲ್ಲಿ ವೀಳ್ಯದೆಲೆ ಬೆಳೆಯಲು ಸಾಧ್ಯವಾಗುತ್ತಿಲ್ಲ. ಹೊಸದಾಗಿ ವೀಳ್ಯದೆಲೆ ಬಳ್ಳಿ ನಾಟಿ ಮಾಡಿದ ನಂತರ ಎಲೆ ಕಟಾವಿಗೆ ಸಿಗಲು ಕನಿಷ್ಠ 2 ವರ್ಷವಾದರೂ ಬೇಕಾಗುತ್ತದೆ. ಬೆಲೆ ಏರಿಕೆಯಾಗುತ್ತಿರುವುದು ರೈತರಿಗೆ ಸಂತಸ ತಂದಿದೆ. ಆದರೆ ದೊಡ್ಡ ವ್ಯಾಪಾರಸ್ಥರಿಗೆ ಒಂದೆರಡು ಬಂಡಲ್‌ಗೂ ಸಾವಿರಾರು ಬಂಡವಾಳ ಹಾಕುವ ಅನಿವಾರ್ಯತೆ ಎದುರಾಗಿದ್ದು, ಸಣ್ಣ ವ್ಯಾಪಾರಸ್ಥರು ಖರೀದಿಸಿ ಅವುಗಳನ್ನು ಬಿಡಿ ಬಿಡಿಯಾಗಿ ಗ್ರಾಹಕರಿಗೆ ಮಾರಾಟ ಮಾಡಿ ಹಾಕಿದ ಬಂಡವಾಳ ಹಿಂತೆಗೆಯುವ ಸವಾಲು ಎದುರಾಗಿದೆ.

ವೀಳ್ಯದೆಲೆಯು ಶುಭ ಸಮಾರಂಭಗಳಿಗೆ ಅಗತ್ಯವಾಗಿ ಬೇಕಾಗಿರುವ ವಸ್ತು. ಇದರೊಂದಿಗೆ ದೈನಂದಿನ ಬದುಕಿನಲ್ಲಿ ವೀಳ್ಯದೆಲೆ ಅವಶ್ಯಕವಾಗಿದೆ. ಬೇಸಿಗೆ ಕಾಲ ಬಂದಿರುವುದರಿಂದ ಇಳುವರಿ ಕುಂಠಿತವಾಗಿದ್ದು, ದರ ಏರಿಕೆಯಾದರೂ ಖರೀದಿಸುವುದು ಅನಿವಾರ್ಯವಾಗಿದೆ ಎಂದು ಕೊಡಗಾನೂರ ಗ್ರಾಮದ ರಮೇಶ ರಾಮಜಿ ಅಭಿಪ್ರಾಯಪಟ್ಟಿದ್ದಾರೆ.

ಕೋಟ್

ಕಳೆದ ಒಂದು ತಿಂಗಳ ಹಿಂದೆ ವೀಳ್ಯದೆಲೆ ಬೆಳೆಗೆ ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ವೀಳ್ಯದೆಲೆಯ ಇಳುವರಿ ಕುಂಠಿತವಾಗಿದ್ದು, ಅನಿವಾರ್ಯವಾಗಿ ದರ ಏರಿಕೆ ಕಂಡಿದೆ.

  • ಹನಮಂತ ಕರಿ.
    ಪ್ರಗತಿಪರ ರೈತ, ರುದ್ರಾಪೂರ.

ಕೋಟ್

ಚಳಿಗಾಲದ ಸಮಯ ಮತ್ತು ಈ ಸಮಯದಲ್ಲಿ ಗುಣಮಟ್ಟದ ಇಳುವರಿ ಬಾರದಿರುವುದು, ಜತೆಗೆ ಮಂಗಳ ಕಾರ್ಯಗಳು ಹೆಚ್ಚಾಗಿರುವುದರಿಂದ ಬೆಲೆ ಏರಿಕೆಯಾಗಿದೆ. ಇದು ಇನ್ನೂ 3-4 ತಿಂಗಳು ಹೀಗೆ ಇರುವ ಸಾಧ್ಯತೆ ಇದೆ.

  • ಮಹಾಂತೇಶ್ ಆಂಟಿನ.
    ಸಹಾಯಕ ತೋಟಗಾರಿಕೆ ಅಧಿಕಾರಿ-ನರೇಗಲ್.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!