ಗದಗ: ರೈತ ಕುಟುಂಬಗಳಿಗೆ ಕನ್ಯಾ ಕೊಡುವವರಿಗೆ ಸರ್ಕಾರ ₹2 ಲಕ್ಷ ಸಹಾಯಧನ ನೀಡಬೇಕು ಎಂದು ಸಿದ್ದನಕೊಳ್ಳದ ಡಾ. ಶಿವಕುಮಾರ ಸ್ವಾಮೀಜಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಗದಗ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ದಿನಮಾನಗಳಲ್ಲಿ ರೈತರಿಗೆ ಕನ್ಯಾ ಕೊಡುವ ಕುಟುಂಬಗಳಿಗೆ ಸರ್ಕಾರದಿಂದ ಸಹಾಯಧನ ನೀಡುವ ವ್ಯವಸ್ಥೆ ಜಾರಿಯಾಗಬೇಕು ಎಂದು ಹೇಳಿದರು.
ಈ ಹಿಂದೆಯೂ ಇದೇ ವಿಚಾರವನ್ನು ಸರ್ಕಾರದ ಮುಂದೆ ಪ್ರಸ್ತಾಪಿಸಿದ್ದಾಗಿ ತಿಳಿಸಿದ ಸ್ವಾಮೀಜಿ, ಇತ್ತೀಚಿನ ದಿನಗಳಲ್ಲಿ ರೈತರಿಗೆ ಕನ್ಯಾ ಕೊಡುವುದು ಕಡಿಮೆಯಾಗುತ್ತಿದೆ ಎಂಬುದರ ಬಗ್ಗೆ ಕಳವಳ ವ್ಯಕ್ತಪಡಿಸಿದರು. ರೈತ ಕುಟುಂಬಗಳು ಹಲವು ಸಂಕಷ್ಟಗಳನ್ನು ಎದುರಿಸುತ್ತಿರುವುದರಿಂದ ವಿವಾಹ ಸಂಬಂಧಗಳಲ್ಲೂ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಹೇಳಿದರು.
ನಗೆ ಚಟಾಕಿಯ ಜೊತೆಗೆ ಮಾತನಾಡಿದ ಸ್ವಾಮೀಜಿ, ವರ–ಕನ್ಯಾ ಸಮಸ್ಯೆಯ ಗಂಭೀರತೆಯನ್ನು ಉಲ್ಲೇಖಿಸಿ, ರೈತ ಸಮುದಾಯದ ಸ್ಥಿತಿಗತಿಗಳ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತಿಸಬೇಕು ಎಂದು ಹೇಳಿದರು.



