ಉಡುಪಿ: ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ತೆರಳುವುದಾಗಿ ಮನೆಯಿಂದ ಹೊರಟಿದ್ದ ಯಾತ್ರಾರ್ಥಿಯೊಬ್ಬರು ಉಡುಪಿಯ ವಸತಿಗೃಹದಲ್ಲಿ ನಿಗೂಢವಾಗಿ ಸಾವನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಹಳೆ ಸರ್ಕಾರಿ ಬಸ್ ನಿಲ್ದಾಣದ ಬಳಿ ಇರುವ ಲಾಡ್ಜ್ನ ಕೊಠಡಿಯಲ್ಲಿ ಕುಳಿತ ಕುರ್ಚಿಯಲ್ಲೇ ವ್ಯಕ್ತಿ ಮೃತಪಟ್ಟಿರುವುದು ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ದಾವಣಗೆರೆ ಮೂಲದ ಮಹಾಂತೇಶ ಎಂ.ಜಿ ಎಂದು ಗುರುತಿಸಲಾಗಿದೆ. ಕೊಠಡಿಯಿಂದ ಅವರು ದೀರ್ಘ ಕಾಲ ಹೊರಬಾರದಿದ್ದರಿಂದ ಲಾಡ್ಜ್ ಸಿಬ್ಬಂದಿಗೆ ಅನುಮಾನ ಉಂಟಾಗಿ, ಬಾಗಿಲು ತೆರೆದು ನೋಡಿದಾಗ ವ್ಯಕ್ತಿ ಪ್ರಾಣ ಕಳೆದುಕೊಂಡಿರುವುದು ಗೊತ್ತಾಗಿದೆ.
ಮೃತ ಮಹಾಂತೇಶ ಅವರು ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ತೆರಳುತ್ತಿರುವುದಾಗಿ ಕುಟುಂಬದವರಿಗೆ ತಿಳಿಸಿ ಮನೆಯಿಂದ ಹೊರಟಿದ್ದರೆಂದು ಹೇಳಲಾಗಿದೆ. ಆದರೆ ಮಧ್ಯದಲ್ಲಿ ಉಡುಪಿಯಲ್ಲಿ ತಂಗಿದ್ದ ಸಂದರ್ಭದಲ್ಲೇ ಈ ಅಕಾಲಿಕ ಸಾವು ಸಂಭವಿಸಿದೆ.
ಸುದ್ದಿ ತಿಳಿದ ತಕ್ಷಣ ನಗರ ಪೊಲೀಸ್ ಠಾಣೆಯ ಎಸ್ಐ ನಾರಾಯಣ, ಎಎಸ್ಐ ಹರೀಶ್ ಹಾಗೂ ಹೆಡ್ ಕಾನ್ಸ್ಟೇಬಲ್ ಆಶಾಲತಾ ಸ್ಥಳಕ್ಕೆ ಆಗಮಿಸಿ, ಮೃತನ ಪತ್ನಿ ಮತ್ತು ಅಣ್ಣನ ಎದುರಲ್ಲೇ ಮಹಜರ್ ಸೇರಿದಂತೆ ಕಾನೂನು ಪ್ರಕ್ರಿಯೆಗಳನ್ನು ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಈ ಕಾರ್ಯದಲ್ಲಿ ಸಮಾಜಸೇವಕ ನಿತ್ಯಾನಂದ ಒಳಕಾಡು ಸಹಕಾರ ನೀಡಿದ್ದಾರೆ. ಸಾವಿಗೆ ಸ್ಪಷ್ಟ ಕಾರಣ ಇನ್ನೂ ದೃಢಪಟ್ಟಿಲ್ಲ. ಅನಾರೋಗ್ಯವೇ ಸಾವಿಗೆ ಕಾರಣವಾಗಿರಬಹುದೆಂದು ಪೊಲೀಸರು ಶಂಕಿಸಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.



