HomeKarnataka Newsಕಾಂಗ್ರೆಸ್ ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ, ಏಳನೇ ಗ್ಯಾರಂಟಿ ನೀರಿನ ಗ್ಯಾರಂಟಿ: ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ, ಏಳನೇ ಗ್ಯಾರಂಟಿ ನೀರಿನ ಗ್ಯಾರಂಟಿ: ಡಿ.ಕೆ. ಶಿವಕುಮಾರ್

For Dai;y Updates Join Our whatsapp Group

Spread the love

ಹಾವೇರಿ: ಕಾಂಗ್ರೆಸ್ ಸರ್ಕಾರವು ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡುತ್ತಿದೆ. ಕೇಂದ್ರ ಸರ್ಕಾರ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ಎತ್ತಿನಹೊಳೆಗೆ ಅನುಮತಿ ಕೊಟ್ಟರೆ ಏಳನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದರು.

ಹಾವೇರಿಯಲ್ಲಿ ಶನಿವಾರ ನಡೆದ ಜನಸೇವೆಯಲ್ಲಿ ಸಾರ್ಥಕ ಸಾವಿರ ದಿನ, ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ನಾನು ಚುನಾವಣೆಗೆ ಬಂದಾಗ ಒಂದು ಮಾತು ಹೇಳಿದ್ದೆ. ಕಮಲ ಕೆರೆಯಲ್ಲಿದ್ದರೆ ಚಂದ, ತೆನೆ ಹೊಲದಲ್ಲಿದ್ದರೆ ಚಂದ,

ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ. ಈ ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರುವ ಕಾರಣಕ್ಕೆ ಪಂಚ ಗ್ಯಾರಂಟಿ ನೀಡಿ, ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ ನೀಡುತ್ತಿದ್ದೇವೆ. ಭೂ ದಾಖಲೆ ಇಲ್ಲದ 1,11,111 ಜನರಿಗೆ ಪೋಡಿ ಮಾಡಿ, ಖಾತಾ ಮಾಡಿ ದಾಖಲೆ ನೀಡಲಾಗಿದೆ. ಆಮೂಲಕ ನಿಮ್ಮ ಮುಂದಿನ ಪೀಳಿಗೆಗೆ ಆಸ್ತಿ ದಾಖಲೆ ಕೊಟ್ಟ ಏಕೈಕ ಸರ್ಕಾರ ಈ ಕಾಂಗ್ರೆಸ್ ಸರ್ಕಾರ” ಎಂದು ತಿಳಿಸಿದರು.

“ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ 35-40 ಲಕ್ಷ ಪರಿಹಾರ ನೀಡಲು ನಮ್ಮ ಸರ್ಕಾರ ತೀರ್ಮಾನಿಸಿದೆ. ಕಾವೇರಿ ನದಿಗೆ ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ನಮ್ಮ ಮಾರ್ಗದರ್ಶನದಲ್ಲಿ ಕಾನೂನು ತಜ್ಞರ ತಂಡ ವಾದ ಮಂಡಿಸಿ ಸುಪ್ರೀಂ ಕೋರ್ಟ್ ನಲ್ಲಿ ಈ ಯೋಜನೆ ಪರವಾಗಿ ತೀರ್ಪು ಬಂದಿದೆ. ಆಮೂಲಕ ತಮಿಳುನಾಡು ಹಾಕಿದ್ದ ಆಕ್ಷೇಪಣಾ ಅರ್ಜಿ ವಜಾಗೊಳಿಸಲಾಗಿದೆ. ಈಗ ಈ ಯೋಜನೆಗೆ ಡಿಪಿಆರ್ ಸಿದ್ಧಪಡಿಸುತ್ತಿದ್ದೇವೆ.

ಮಹದಾಯಿ ವಿಚಾರದಲ್ಲಿ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡಿಲ್ಲ. ಇನ್ನು ಕುಡಿಯುವ ನೀರು ಪೂರೈಕೆ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರ 3 ತಿಂಗಳಲ್ಲಿ ಅನುಮತಿ ಕೊಟ್ಟರೆ ಸಾಕು. ಚಿಕ್ಕಬಳ್ಳಾಪುರ, ಕೋಲಾರಕ್ಕೆ ನೀರು ಹರಿಸುವ ಕೆಲಸವನ್ನು ಈ ಸರ್ಕಾರ ಹಾಗೂ ಡಿ.ಕೆ. ಶಿವಕುಮಾರ್ ಮಾಡಲಿದ್ದಾರೆ.

ಕೃಷ್ಣಾ, ಕಾವೇರಿ, ಮಹದಾಯಿ ಯೋಜನೆಗಳ ಮೂಲಕ ರೈತರ ಬದುಕು ಹಸನ ಮಾಡಲು ನಮ್ಮ ಸರ್ಕಾರ 7ನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡಲಿದೆ. ಪ್ರತಿಯೊಬ್ಬರಿಗೆ ಕುಡಿಯಲು ನೀರು, ವ್ಯವಸಾಯಕ್ಕೆ ನೀರು, ಕೆರೆ ತುಂಬಿಸಿ ಅಂತರ್ಜಲ ಹೆಚ್ಚಿಸಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಘೋಷಿಸಿದರು.

ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟು ಬರಲಿವೆ, ಬರೆದಿಟ್ಟುಕೊಳ್ಳಿ

“ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಒದಗಿಸಲು ಇಂಧನ ಇಲಾಖೆಯಿಂದ ವರ್ಷಕ್ಕೆ 20 ಸಾವಿರ ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ. ಇಂತಹ ಐಸಿಹಾಸಿಕ ಕಾರ್ಯಕ್ರಮಗಳನ್ನು ನಾವು ನೀಡುತ್ತಿದ್ದೇವೆ. ಈ ಬಾರಿ ಚುನಾವಣೆಯಲ್ಲಿ ನಮಗೆ 136 ಸೀಟುಗಳು ಬಂದಿದ್ದವು, ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟುಗಳು ಬರಲಿವೆ. ನನ್ನ ಈ ಮಾತನ್ನು ಬರೆದಿಟ್ಟುಕೊಳ್ಳಿ.

ನನಗೆ ನಮ್ಮ ಶಾಸಕರಿಗೆ ಆತ್ಮವಿಶ್ವಾಸವಿದೆ. 3 ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಎರಡು ಕಡೆ ಮಾಜಿ ಮುಖ್ಯಮಂತ್ರಿಗಳ ಪುತ್ರರು ಸ್ಪರ್ಧೆ ಮಾಡಿದ್ದರು. ಆ ಕ್ಷೇತ್ರಗಳು ನಮ್ಮ ಬಳಿ ಇರಲಿಲ್ಲ. ಆ ಕ್ಷೇತ್ರಗಳನ್ನು ಕಾಂಗ್ರೆಸ್ ಗೆ ನೀಡಿ ನಮ್ಮ ಸಂಖ್ಯಾಬಲವನ್ನು 139ಕ್ಕೆ ಏರಿಕೆ ಮಾಡಿದ್ದೀರಿ. ನಿಮಗೆಲ್ಲರಿಗೂ ಧನ್ಯವಾದ. ನಿಮ್ಮ ಈ ಋಣ ತೀರಿಸಲು ಈ ಕಾರ್ಯಕ್ರಮವನ್ನು ಇಲ್ಲಿ ಆಯೋಜಿಸಿದ್ದೇವೆ” ಎಂದು ತಿಳಿಸಿದರು.

ಬಿಜೆಪಿ, ದಳದ ಸರ್ಕಾರ ಇಂತಹ ಒಂದೇ ಒಂದು ಜನಪರ ಕಾರ್ಯಕ್ರಮ ನೀಡಿದೆಯೇ?

“ಜನರು ನೆಮ್ಮದಿಯಿಂದ ಬದುಕುತ್ತಿರುವ ದಿನಗಳು, ಮಹಿಳೆಯರು ಸಂತೋಷದಿಂದ ಬಸ್ ನಲ್ಲಿ ಪ್ರಯಾಣ ಮಾಡುತ್ತಿರುವ ದಿನಗಳು, ಗೃಹಿಣಿಯರ ಬದುಕಿನಲ್ಲಿ ಬದಲಾವಣೆ ಕಂಡ ದಿನಗಳು, ಯುವಕರು ಉದ್ಯೋಗ ಸೃಷ್ಟಿಮಾಡಿಕೊಳ್ಳುತ್ತಿರುವ ದಿನಗಳನ್ನು ನಾವು ನೀವು ನೋಡುತ್ತಿದ್ದೇವೆ. ಯಡಿಯೂರಪ್ಪನವರೇ, ಮಿಸ್ಟರ್ ಕುಮಾರಸ್ವಾಮಿ,

ಮಿಸ್ಟರ್ ಅಶೋಕ್, ಮಿಸ್ಟರ್ ವಿಜಯೇಂದ್ರ ನಿಮ್ಮ ಆಡಳಿತ ಅವಧಿಯಲ್ಲಿ ಇಂತಹ ಒಂದು ಕೆಲಸವನ್ನು ನೀವು ಮಾಡಿದ್ದರೆ, ಜನರಿಗಾಗಿ ಒಂದೇ ಒಂದು ಕಾರ್ಯಕ್ರಮವನ್ನು ಬಿಜೆಪಿ ಹಾಗೂ ಜನತಾ ದಳದವರು ಕೊಟ್ಟಿದ್ದರೆ, ರಾಜಕೀಯದಲ್ಲಿ ನಿಮಗೆ ಮಾತನಾಡುವ ಶಕ್ತಿ ಇರುತ್ತಿತ್ತು. ಆದರೆ ನೀವು ಅದನ್ನು ಕಳೆದುಕೊಂಡಿದ್ದೀರಿ” ಎಂದು ವಾಗ್ದಾಳಿ ನಡೆಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!