ಲಕ್ಕುಂಡಿ: ರಾಜ್ಯ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿಜಿ ರಾಮಜೀ ಕಾಯ್ದೆಯ ನಿಯಮದಂತೆ ರಾಜ್ಯ ಸರ್ಕಾರವು ಶೇ. 40ರಷ್ಟು ಪಾಲನ್ನು ಭರಿಸಬೇಕಾಗಿರುವ ಹಿನ್ನೆಲೆಯಲ್ಲಿ ಜನರಲ್ಲಿ ಯೋಜನೆ ಕುರಿತು ತಪ್ಪು ಭಾವನೆಗಳನ್ನು ಮೂಡಿಸಲಾಗುತ್ತಿದೆ ಎಂದು ಮಾಜಿ ಸಚಿವರು ಹಾಗೂ ಶಾಸಕ ಸಿ.ಸಿ. ಪಾಟೀಲ್ ಆರೋಪಿಸಿದರು.
ಇಲ್ಲಿನ ವಿರುಪಾಕ್ಷೇಶ್ವರ ದೇವಸ್ಥಾನ ಪ್ರಾಂಗಣದಲ್ಲಿ ಲಕ್ಕುಂಡಿ ಬಿ.ಜೆ.ಪಿ. ಮಂಡಲ ವತಿಯಿಂದ ಹಮ್ಮಿಕೊಂಡಿದ್ದ ವಿಬಿಜಿ ರಾಮಜೀ ಯೋಜನೆ ಕುರಿತ ಜನಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಕಾಯ್ದೆಯನ್ನು ವಿರೋಧಿಸುವ ಉದ್ದೇಶದಿಂದಲೇ 11 ದಿನಗಳ ಅಧಿವೇಶನ ನಡೆಸಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗಿದೆ. ಕೇಂದ್ರ ಸರ್ಕಾರದ ಕಾಯ್ದೆಯನ್ನು ಬದಲಾಯಿಸಲು ಸಾಧ್ಯವಿಲ್ಲವೆಂಬುದು ಗೊತ್ತಿದ್ದರೂ ಅನಗತ್ಯವಾಗಿ ವಿರೋಧಿಸುವುದು ಹತಾಶೆ ಮನೋಭಾವನೆಯಾಗಿದೆ ಎಂದರು.
ಈ ಹಿಂದೆ ಕಾಂಗ್ರೆಸ್ ಸರ್ಕಾರವು ಇದೇ ಯೋಜನೆಗೆ ಸುಮಾರು 20 ಬಾರಿ ಹೆಸರು ಬದಲಾಯಿಸಿದ್ದು ಜನರಿಗೆ ಇನ್ನೂ ನೆನಪಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರವು ಯೋಜನೆಗೆ ಅನುದಾನವನ್ನು ₹30 ಸಾವಿರ ಕೋಟಿಯಿಂದ ₹90 ಸಾವಿರ ಕೋಟಿಗೆ ಹೆಚ್ಚಿಸಿದೆ. ಭ್ರಷ್ಟಾಚಾರ ತಡೆಗಟ್ಟಲು ಕಾರ್ಮಿಕರಿಗೆ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ವಿವರಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಹಣ ಕ್ರೋಢೀಕರಿಸಲು ಸಾಧ್ಯವಾಗದೆ, ಕೇಂದ್ರದ ಜನಪರ ಯೋಜನೆಗಳನ್ನು ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿದ ಅವರು, ಸಿದ್ದರಾಮಯ್ಯ ಸರ್ಕಾರವು ₹8 ಲಕ್ಷ ಕೋಟಿ ಸಾಲದಲ್ಲಿದೆ ಎಂದರು.
ಬಿ.ಜೆ.ಪಿ. ಧುರೀಣ ವಸಂತ ಮೇಟಿ, ಮಾಜಿ ಯೋಧ ದತ್ತಣ್ಣ ಜೋಶಿ, ಅಧ್ಯಕ್ಷತೆ ವಹಿಸಿದ್ದ ಲಕ್ಕುಂಡಿ ಬಿ.ಜೆ.ಪಿ. ಮಂಡಲದ ಅಧ್ಯಕ್ಷ ಪ್ರಕಾಶ ಅರಹುಣಶಿ ಹಾಗೂ ಪ್ರಧಾನ ಕಾರ್ಯದರ್ಶಿ ಶರಣಪ್ಪ ಕುದರಿ ಮಾತನಾಡಿದರು.
ಅತ್ತಿಮಬ್ಬೆ ಮಹಾದ್ವಾರದಿಂದ ವಿರುಪಾಕ್ಷೇಶ್ವರ ದೇವಸ್ಥಾನವರೆಗೆ ಪಾದಯಾತ್ರೆ ನಡೆಸಲಾಯಿತು.
ಜಿ.ಪಂ. ಮಾಜಿ ಸದಸ್ಯ ಎಸ್.ಬಿ. ಕಲಕೇರಿ, ಬಿ.ಜೆ.ಪಿ. ಯುವ ಧುರೀಣ ಉಮೇಶಗೌಡ ಪಾಟೀಲ, ಪ್ರದೀಪ ನವಲಗುಂದ, ಅಶೋಕ ಬೂದಿಹಾಳ, ತಾ.ಪಂ. ಮಾಜಿ ಸದಸ್ಯ ಮಹೇಶ ಮುಸ್ಕಿನಭಾವಿ, ಫಕ್ಕೀರಮ್ಮ ಬೇಲೇರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾ.ಪಂ. ಮಾಜಿ ಸದಸ್ಯ ಪ್ರಲ್ಹಾದ ಹೊಸಳ್ಳಿ ನಿರೂಪಿಸಿದರು. ಎಸ್.ಸಿ. ಮೋರ್ಚಾ ಕಾರ್ಯದರ್ಶಿ ಮರಿಯಪ್ಪ ವಡ್ಡರ ವಂದಿಸಿದರು.



