HomeGadag Newsಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿರಲಿ: ಸರ್ವಾಧ್ಯಕ್ಷೆ ಲಲಿತಕ್ಕ ಅಭಿಮತ

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿರಲಿ: ಸರ್ವಾಧ್ಯಕ್ಷೆ ಲಲಿತಕ್ಕ ಅಭಿಮತ

For Dai;y Updates Join Our whatsapp Group

Spread the love

ಲಕ್ಷ್ಮೇಶ್ವರ: ಕರ್ನಾಟಕ ನೆಲದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿರಬೇಕು ಎಂಬುದು ಕೇವಲ ಘೋಷವಾಕ್ಯವಲ್ಲ, ನಾಡಿನ ನಿಜಸ್ವರೂಪವಾಗಬೇಕು ಎಂದು ಲಕ್ಷ್ಮೇಶ್ವರ ತಾಲೂಕು ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಲಲಿತಕ್ಕ ಕೆರಿಮನಿ ಅಭಿಪ್ರಾಯಪಟ್ಟರು.

ತಾಲೂಕಿನ ಯಳವತ್ತಿ ಗ್ರಾಮದಲ್ಲಿ ನಡೆದ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ ಅವರು, ಕನ್ನಡವು ಕೇವಲ ಒಂದು ಭಾಷೆಯಲ್ಲ; ಅದು ಈ ನೆಲದ ಸಂಸ್ಕೃತಿ, ಸಂಸ್ಕಾರ ಮತ್ತು ಪರಂಪರೆಯನ್ನು ಪ್ರತಿಬಿಂಬಿಸುವ ಶಕ್ತಿ ಎಂದು ಹೇಳಿದರು.

ಪ್ರತಿಯೊಬ್ಬ ಕನ್ನಡಿಗನಲ್ಲೂ ಭಾಷೆಯ ಬಗ್ಗೆ ಅಭಿಮಾನ ಮತ್ತು ಸ್ವಾಭಿಮಾನ ಅಂತರ್ಗತವಾಗಿರಬೇಕು ಎಂದರು. ಪ್ರಾಂತೀಯ ಹೆಸರಿನಲ್ಲಿ ವಿಭಜನೆಯಾಗಿದ್ದ ನಾಡು ಹಾಗೂ ಕನ್ನಡಿಗರನ್ನು ಒಂದೇ ಸೂರಿನಡಿ ಸೇರಿಸಲು ಹೋರಾಡಿದ ಮಹನೀಯರನ್ನು ಆದರ್ಶವಾಗಿಟ್ಟುಕೊಂಡು ನಾಡು-ನುಡಿಯ ರಕ್ಷಣೆಗೆ ಎಲ್ಲರೂ ಬದ್ಧರಾಗಬೇಕು ಎಂದು ಕರೆ ನೀಡಿದರು.

ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ನಾಡು-ನುಡಿಯನ್ನು ಮತ್ತಷ್ಟು ಶ್ರೀಮಂತಗೊಳಿಸಲು ಶಾಲಾ ಹಂತದಲ್ಲಿಯೇ ಮಕ್ಕಳಲ್ಲಿ ಕನ್ನಡದ ಬಗ್ಗೆ ಗೌರವಾಭಿಮಾನ ಬೆಳೆಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪಾಲಕರು, ಶಿಕ್ಷಕರು, ಕಸಾಪ ಹಾಗೂ ಕನ್ನಡ ಸಂಘಟನೆಗಳ ಜವಾಬ್ದಾರಿ ಹೆಚ್ಚಾಗಿದೆ ಎಂದರು.

“ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡಿಗವಾಗಿರು” ಎಂಬ ಕುವೆಂಪು ಅವರ ಕವಿವಾಣಿಯಂತೆ ಪ್ರತಿಯೊಬ್ಬ ಕನ್ನಡಿಗನ ಮನದಾಳದಲ್ಲಿ ಕನ್ನಡ ಮಿಡಿಯಬೇಕು. ಕನ್ನಡ ಪ್ರೀತಿಸುವುದು, ಬೆಳೆಸುವುದು ಮತ್ತು ಗೌರವಿಸುವುದೇ ನಿಜವಾದ ನಾಡಭಕ್ತಿ ಎಂದು ಅಭಿಪ್ರಾಯಪಟ್ಟರು.

ಮಕ್ಕಳಲ್ಲಿ ಕನ್ನಡ ಪುಸ್ತಕ ಓದುವ ಹವ್ಯಾಸ ಬೆಳೆಸಲು ಶಾಲೆಗಳಲ್ಲಿ ಕಡ್ಡಾಯವಾಗಿ ಗ್ರಂಥಾಲಯಗಳನ್ನು ತೆರೆಯಬೇಕು. ಉತ್ತಮ ಪುಸ್ತಕಗಳ ಓದು ಮಕ್ಕಳ ಜ್ಞಾನವಿಕಾಸಕ್ಕೆ ಕಾರಣವಾಗುತ್ತದೆ. ಆಡಳಿತ, ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಕನ್ನಡ ಬಳಕೆ ಹೆಚ್ಚಾಗಬೇಕು. ಭಾಷೆಯನ್ನು ಉಳಿಸುವುದು ಎಂದರೆ ನಮ್ಮ ಗುರುತು, ಆತ್ಮಗೌರವ ಮತ್ತು ಭವಿಷ್ಯವನ್ನು ಉಳಿಸುವುದಾಗಿದೆ ಎಂದರು.

ಐತಿಹಾಸಿಕ ಹಿನ್ನೆಲೆಯ ಯಳವತ್ತಿ ಗ್ರಾಮದಲ್ಲಿ ನಡೆದ ಸಮ್ಮೇಳನಕ್ಕೆ ಮಹಿಳೆಗೆ ಸರ್ವಾಧ್ಯಕ್ಷ ಸ್ಥಾನ ನೀಡಿರುವುದು ಶ್ಲಾಘನೀಯ ಕಾರ್ಯ. ಈ ಗೌರವ ನೀಡಿದ ಯಳವತ್ತಿ ಮಹಾಜನತೆ ಹಾಗೂ ಕಸಾಪ ಘಟಕಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು.

ಕನ್ನಡ ಸಾರಸ್ವತ ಲೋಕಕ್ಕೆ ಪುಲಿಗೆರೆ ಪ್ರದೇಶದ ಕೊಡುಗೆ ಅಪಾರವಾಗಿದೆ. ಸಾಹಿತ್ಯ ಚಟುವಟಿಕೆಗಳಿಗೆ ಪೂರಕ ವಾತಾವರಣವಿರುವ ತಾಲೂಕಿನಲ್ಲಿ ಕನ್ನಡ ಮನಸ್ಸುಗಳು ಒಂದಾಗಿ ತಾಯಿ ಭಾಷೆ, ನೆಲ-ಜಲ ಸಂರಕ್ಷಣೆ ಮತ್ತು ಬೆಳವಣಿಗೆಗಾಗಿ ಸಜ್ಜಾಗಬೇಕು. ಕನ್ನಡಿಗರ ಪ್ರತಿನಿಧಿಕ ಸಂಸ್ಥೆಯಾದ ಕಸಾಪ ಈ ದಿಸೆಯಲ್ಲಿ ಅವಿರತ ಶ್ರಮಿಸುತ್ತಿದೆ ಎಂದು ಹೇಳಿದರು. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿ ಮೆರೆಯಬೇಕು. ಕನ್ನಡಕ್ಕೆ ಆ ತಾಕತ್ತು ಮತ್ತು ಸಾಮರ್ಥ್ಯವಿದೆ.

ಲಲಿತಕ್ಕ ಕೆರಿಮನಿ, ಸರ್ವಾಧ್ಯಕ್ಷೆ,
ಕನ್ನಡ ಸಾಹಿತ್ಯ ಸಮ್ಮೇಳನ, ಯಳವತ್ತಿ.

ಕನ್ನಡ ಮಾಧ್ಯಮ ಶಾಲೆಗಳಿಗೆ ಅಗತ್ಯ ಸೌಲಭ್ಯ ಒದಗಿಸಿ
ಅರ್ಹ ಶಿಕ್ಷಕರನ್ನು ನೇಮಿಸುವ ಮೂಲಕ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಬೇಕು. ಪ್ರಾಥಮಿಕ ಶಿಕ್ಷಣ ಕನ್ನಡ ಮಾಧ್ಯಮದಲ್ಲೇ ಇರಬೇಕು. ಸಾಹಿತ್ಯ ಭವನ, ರಂಗಮಂದಿರ, ಕ್ರೀಡಾಂಗಣ, ಪ್ರವಾಸಿ ತಾಣಗಳ ಅಭಿವೃದ್ಧಿ, ನೀರಾವರಿ ಯೋಜನೆಗಳ ಜೊತೆಗೆ ಹಳ್ಳಿಯ ಸಂಸ್ಕೃತಿ ಉಳಿವಿಗಾಗಿ ಭಜನಾ ಮಂಡಳಿ ಹಾಗೂ ಕಲಾತಂಡಗಳಿಗೆ ಸರ್ಕಾರ ಧನಸಹಾಯ ನೀಡಿ ಪ್ರೋತ್ಸಾಹಿಸಬೇಕು ಎಂದು ಲಲಿತಕ್ಕ ಕೆರಿಮನಿ ಒತ್ತಾಯಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!