-
ವಿಜಯಸಾಕ್ಷಿ ಸುದ್ದಿ, ಗದಗ: ಫೆಬ್ರವರಿ 19ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಇದೇ ಸಂದರ್ಭದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತ್ಯುತ್ಸವ ಭವ್ಯವಾಗಿ ನಡೆಯಲಿದೆ ಎಂದು ಜಯಂತ್ಯುತ್ಸವ ಸಮಿತಿಯ ಮಾಜಿ ಅಧ್ಯಕ್ಷ ಜಗದೀಶ್ ಎಸ್.ಪಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಅಂಗಾಂಗ ದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ನಾರಾಯಣ ಹೊನ್ನಾಳ ಹಾಗೂ ಯಲ್ಲಪ್ಪ ಕಾಂಬ್ಳೇಕರ ಅವರ ಭಾವಚಿತ್ರಗಳನ್ನು ಮೆರವಣಿಗೆಯಲ್ಲಿ ಪ್ರದರ್ಶಿಸಲಾಗುವುದು ಎಂದರು.
ಮೆರವಣಿಗೆಯಲ್ಲಿ 17 ಅಡಿ ಎತ್ತರದ ಪ್ರಭು ಶ್ರೀರಾಮ, ಸಹಸ್ರಾರ್ಜುನ, ಮಹರ್ಷಿ ವಾಲ್ಮೀಕಿ, ವೀರಮಾತೆ ಕಿತ್ತೂರ ರಾಣಿ ಚೆನ್ನಮ್ಮ, ಪಾಂಡುರಂಗ ವಿಠ್ಠಲ ಸೇರಿದಂತೆ ಅನೇಕ ಮಹಾನ್ ಪುರುಷರ ಹಾಗೂ ದಾರ್ಶನಿಕರ ಮೂರ್ತಿಗಳು ಭಾಗವಹಿಸಲಿವೆ. ಜಿಲ್ಲೆಯ ಎಲ್ಲ ಹಿಂದೂ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಮುಖಂಡ ಅನಿಲ ಅಬ್ಬಿಗೇರಿ ಮಾತನಾಡಿ, ಕಳೆದ 10 ವರ್ಷಗಳಿಂದ ಶಿವಾಜಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಬಾರಿ ಸೇವಾಲಾಲ್ ಜಯಂತಿಯನ್ನೂ ಜೊತೆಯಾಗಿ ಆಚರಿಸಲಾಗುತ್ತಿದೆ. ರಾಚೋಟೇಶ್ವರ ದೇವಸ್ಥಾನದಿಂದ ಆರಂಭವಾಗುವ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಬಹಿರಂಗ ಸಭೆ ನಡೆಯಲಿದೆ. ದಿಕ್ಸೂಚಿ ಭಾಷಣಕಾರರಾಗಿ ಶ್ರೀ ಸೋಮಲಿಂಗ ಮಹಾಸ್ವಾಮೀಜಿ ಆಗಮಿಸಲಿದ್ದು, ಡಾ. ಮಲ್ಲಿಕಾರ್ಜುನ ಬಾಳಿಕಾಯಿ ಅವರು ಸೇವಾಲಾಲ್ ಹಾಗೂ ಶಿವಾಜಿ ಮಹಾರಾಜರ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದರು.
ಕರ್ನಾಟಕ ರಾಜ್ಯ ವಿವಿಧ ಹಿಂದೂ ಸಂಘಟನೆಗಳ ಸಂಚಾಲಕ ರಾಜು ಖಾನಪ್ಪನವರ ಮಾತನಾಡಿ, ಹಿಂದೂ ಸಂಘಟನೆಗೆ ಶಕ್ತಿ ತುಂಬುವ ಉದ್ದೇಶದಿಂದ ಹೋರಾಟ ಮತ್ತು ಭಕ್ತಿಯೊಂದಿಗೆ ಜಯಂತಿ ಆಚರಿಸಲಾಗುತ್ತಿದೆ. ಮೆರವಣಿಗೆ ಆರಂಭಕ್ಕೂ ಮುನ್ನ ಗಜಾನನ ಸಮಿತಿಯಿಂದ 1,500 ಜನರಿಗೆ ಪ್ರಸಾದ, 10ರಿಂದ 12 ಸಾವಿರ ಜನರಿಗೆ ಊಟ, 10 ಸಾವಿರ ಜನರಿಗೆ ಪ್ರಸಾದ ಹಾಗೂ ನೀರು, ಮಜ್ಜಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಮರಾಠ ಹಾಗೂ ಲಂಬಾಣಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. 30ರಿಂದ 50 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಎಲ್ಲರೂ ಕುಟುಂಬ ಸಮೇತವಾಗಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಅಜ್ಜಣ್ಣ ಮಲ್ಲಾಡದ, ಕಿಸನ್ ಮೇರವಾಡೆ, ಮಹೇಶ್ ರೋಖಡೆ, ಕೃಷ್ಣಪ್ಪ ಲಮಾಣಿ, ರಾಜು ಗದ್ದಿ, ಸುನಿಲ್ ಮುಳ್ಳಾಳ, ವಿರೂಪಾಕ್ಷಪ್ಪ ಹೆಬ್ಬಳ್ಳಿ, ರಾಜು ಮುಧೋಳ, ಕುಮಾರ ನಡಗೇರಿ, ಕಿರಣ್ ಹಿರೇಮಠ, ಕೃಷ್ಣ ಪವಾರ್, ತುಕಾರಾಮ್ ಲಮಾಣಿ, ವಿಶಾಲ್ ಗೋಕಾವಿ ಮುಂತಾದವರು ಉಪಸ್ಥಿತರಿದ್ದರು.
ಸಂತ ಶ್ರೀ ಸೇವಾಲಾಲ್ ಮಹಾರಾಜರು ಕೇವಲ ಲಂಬಾಣಿ ಸಮುದಾಯಕ್ಕೆ ಸೀಮಿತವಾಗಿರದೆ ಹಿಂದೂತ್ವಕ್ಕಾಗಿ ಹೋರಾಟ ಮಾಡಿ ಜಾಗೃತಿ ಮೂಡಿಸಿದವರು. ಈ ಬಾರಿ ಶಿವಾಜಿ ಜಯಂತಿಯ ಜೊತೆಗೆ ಸೇವಾಲಾಲ್ ಮಹಾರಾಜರ ಜಯಂತಿ ಆಚರಿಸುತ್ತಿರುವುದು ಸಂತೋಷದ ವಿಷಯವಾಗಿದೆ.
ಪರಮೇಶ ನಾಯಕ್.
ಅಧ್ಯಕ್ಷರು, ಸೇವಾಲಾಲ್ ಹಾಗೂ ಶಿವಾಜಿ ಜಯಂತ್ಯುತ್ಸವ ಸಮಿತಿ.



