ವಿಜಯಸಾಕ್ಷಿ ಸುದ್ದಿ, ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪಂಚಗ್ಯಾರಂಟಿಗಳ ಸಮರ್ಥ ಜಾರಿಯಿಂದ ಸರ್ಕಾರ ಹೊಸ ದಾಖಲೆಗಳನ್ನು ನಿರ್ಮಿಸಿದೆ. ಸಾಮಾನ್ಯ ಜನರ ಬದುಕಿನಲ್ಲಿ ನೇರ ಬದಲಾವಣೆ ತರುವ ಉದ್ದೇಶದಿಂದ ಜಾರಿಗೊಂಡ ಈ ಯೋಜನೆಗಳು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲೂ ವ್ಯಾಪಕ ಪರಿಣಾಮ ಬೀರಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಅವರು ಶುಕ್ರವಾರ ಬೆಳಿಗ್ಗೆ ಕಲಘಟಗಿ ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕ್ಷೇತ್ರ ಪ್ರಚಾರದ ಎಲ್ಇಡಿ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.
ಕ್ಷೇತ್ರ ಪ್ರಚಾರ ವಾಹನವು ಧಾರವಾಡ ಜಿಲ್ಲೆಯಾದ್ಯಂತ ಒಟ್ಟು 20 ಹಳ್ಳಿಗಳಲ್ಲಿ ಸಂಚರಿಸಿ, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸಲಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿಯೂ ಯೋಜನೆಗಳ ಲಾಭಗಳ ಕುರಿತು ವಿವರಿಸಲಾಗುತ್ತದೆ ಎಂದು ಹೇಳಿದರು.
ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪ್ರತಿಯೊಬ್ಬ ಅರ್ಹ ನಾಗರಿಕರಿಗೆ ತಲುಪಬೇಕು. ಕ್ಷೇತ್ರ ಪ್ರಚಾರ ವಾಹನದ ಮೂಲಕ ಮನೆಮನೆಗೆ ತೆರಳಿ ಎಲ್ಲ ಜನರಿಗೂ ಮನಮುಟ್ಟುವಂತೆ ಪ್ರಚಾರ ಮಾಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಚಾರಕ್ಕಾಗಿ ರೂಪುಗೊಂಡ ಕಲಾತಂಡಗಳೊಂದಿಗೆ ಸಚಿವರು ಸ್ವತಃ ಗೀತೆಗಳನ್ನು ಹಾಡಿ, ತಾಳ ಬಾರಿಸಿ ಕಲಾವಿದರನ್ನು ಪ್ರೋತ್ಸಾಹಿಸಿದರು. ಅವರ ಈ ಸರಳ ಹಾಗೂ ಸ್ನೇಹಪೂರ್ಣ ನಡೆ ಜನಮನ ಗೆದ್ದಿತು. ಕಲೆಯ ಮೂಲಕ ಯೋಜನೆಗಳ ಸಂದೇಶವನ್ನು ಜನರಿಗೆ ತಲುಪಿಸುವ ಪ್ರಯತ್ನ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಸಚಿವರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿ, ಕಲಾವಿದರ ಪ್ರತಿಭೆಯನ್ನು ಮೆಚ್ಚಿದರು. ಈ ಮೂಲಕ ಸಾರ್ವಜನಿಕರಲ್ಲಿ ಉತ್ಸಾಹ ಮೂಡಿಸಿ, ಸರ್ಕಾರದ ಯೋಜನೆಗಳ ಬಗ್ಗೆ ಹೆಚ್ಚಿನ ಅರಿವು ಹಾಗೂ ಭಾಗವಹಿಸುವ ಮನೋಭಾವವನ್ನು ಹೆಚ್ಚಿಸಿದರು.
ಧಾರವಾಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಶಾನಪ್ಪಗೌಡ ಪಾಟೀಲ ಮಾತನಾಡಿದರು. ವಾರ್ತಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಡಾ. ಸುರೇಶ ಹಿರೇಮಠ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಾರ್ತಾ ಇಲಾಖೆಯ ಮನೋಜ ಮಸನಿ ವಂದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಕಲಘಟಗಿ ತಹಸೀಲ್ದಾರ ಬಸವರಾಜ ಹೊಂಕಣನವರ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಪಿ.ವಾಯ್. ಸಾವಂತ, ಕಲಘಟಗಿ ಪ.ಪಂ ಮುಖ್ಯಾಧಿಕಾರಿ ಚಂದ್ರಶೇಖರ ಬಿ, ಸಿಪಿಐ ಶ್ರೀಶೈಲ ಕೌಜಲಗಿ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಕ್ಷೇತ್ರ ಪ್ರಚಾರ ವಾಹನದೊಂದಿಗೆ ಕುಂದಗೋಳ ತಾಲೂಕಿನ ಹರ್ಲಾಪೂರ ಗ್ರಾಮದ ಶ್ರೀ ಸ್ವಾಮಿ ವಿವೇಕಾನಂದ ಜಾನಪದ ಕಲಾತಂಡದ ನಾಯಕರಾದ ದಾವಲಸಾಬ ದೊಡ್ಡಮನಿ ಅವರ ನೇತೃತ್ವದಲ್ಲಿ ಪ್ರಕಾಶ ಮಡಿವಾಳರ, ರಮೇಶ ಸಜ್ಜಗಾರ, ಗೂಳಪ್ಪ ದುರ್ಗಣ್ಣವರ, ನೌಶಾದ ಬೆಂತೂರ ಅವರು ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಕುರಿತು ಜನಪದ ಹಾಡುಗಳು ಹಾಗೂ ಬೀದಿ ನಾಟಕಗಳ ಮುಖಾಂತರ ಜನರಲ್ಲಿ ಜಾಗೃತಿ ಕಾರ್ಯಕ್ರಮವನ್ನು ನೀಡಿದರು.



