ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಸಂಕೇತ್ ಕೊಲೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, 10ನೇ ತರಗತಿ ಓದುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಯಾವುದೇ ಸ್ಪಷ್ಟ ಕಾರಣವಿಲ್ಲದೆ ಹತ್ಯೆ ಮಾಡಲಾಗಿದೆ. ವಿಶೇಷ ತರಗತಿ ಮುಗಿಸಿಕೊಂಡು ಮನೆಗೆ ಬರುತ್ತಿದ್ದಾಗಲೇ ಕೊಲೆ ನಡೆದಿದೆ ಎಂದು ಹೇಳಿದ್ದಾರೆ.
ಭಟ್ಕಳ ಮತ್ತು ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂತಹ ಘಟನೆಗಳು ನಡೆದಿರುವುದನ್ನು ಉಲ್ಲೇಖಿಸಿದ ಅವರು, ದೇಶದ ವಿವಿಧ ಕಡೆ ಕೋಮು ಗಲಭೆ ನಡೆಸುವ ಸಂಚಿನ ಹಿನ್ನಲೆಯಲ್ಲಿ ಕೆಲವರ ಬಂಧನಗಳೂ ನಡೆದಿವೆ. ಈ ಎಲ್ಲವನ್ನು ನೋಡಿದಾಗ ಯೋಜಿತವಾಗಿ ಕೋಮು ಗಲಭೆ ಹುಟ್ಟುಹಾಕಲು ಪ್ರಯತ್ನಿಸುತ್ತಿರುವಂತೆ ಕಾಣಿಸುತ್ತಿದೆ ಎಂದು ಹೇಳಿದರು.
ಇಂತಹ ಘಟನೆಗಳಲ್ಲಿ ಒಂದೇ ಸಮುದಾಯದ ಅಪ್ರಾಪ್ತರು ಭಾಗಿಯಾಗಿರುವುದು ಕಾಕತಾಳಿಯನಾ ಅಥವಾ ಯೋಜಿತವೋ ಎಂಬುದರ ಬಗ್ಗೆ ಸಮಗ್ರ ತನಿಖೆ ಅಗತ್ಯ,” ಎಂದು ಅವರು ಒತ್ತಾಯಿಸಿದರು. ಇದೇ ವೇಳೆ ರಾಜ್ಯದಲ್ಲಿ ಡ್ರಗ್ಸ್ ಹಾವಳಿ ಹೆಚ್ಚುತ್ತಿದೆ ಎಂದು ದೂರಿದ ಅವರು, ರಾಜ್ಯ ಉಡ್ತಾ ಕರ್ನಾಟಕ ಆಗುತ್ತಿರುವಂತಿದೆ. ಎಲ್ಲೆಡೆ ಮಾದಕ ವಸ್ತುಗಳು ಸಿಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.



