ವಿಜಯಸಾಕ್ಷಿ ಸುದ್ದಿ, ಗದಗ: ತಮ್ಮ ಸುಖ ತ್ಯಾಗ ಮಾಡಿದ ತಾಯಿ-ತಂದೆ ವೃದ್ಧಾಶ್ರಮ ಕಾಣುವಂತಾಗಿರುವುದು ಬೇಸರದ ಸಂಗತಿ. ಆದರೆ ಬಸವರಾಜ ಹೊರಟ್ಟಿ ಅವರು ತಾಯಿಯ ಹೆಸರಲ್ಲಿ ಅವ್ವ ಸೇವಾ ಟ್ರಸ್ಟ್ ಸ್ಥಾಪಿಸಿ ಆ ಮೂಲಕ ಸಮಾಜದಲ್ಲಿ ವಿವಿಧ ಕಾರ್ಯಕ್ರಮಗಳ ಆಯೋಜನೆಗೆ ಕಾರಣೀಕರ್ತರಾಗಿರುವುದು ಮಾದರಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಶ್ಲಾಘಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಗದಗ ಜಿಲ್ಲಾ ಘಟಕದಲ್ಲಿ ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್ ಮಾತೋಶ್ರೀ ಗಂಗವ್ವ ಶಿವಲಿಂಗಪ್ಪ ಹೊರಟ್ಟಿ ಸ್ಮರಣಾರ್ಥ ಸ್ಥಾಪಿಸಿರುವ 2025ನೇ ಸಾಲಿನ ‘ದತ್ತಿ ನಿಧಿ’ ಪ್ರಶಸ್ತಿಯನ್ನು ನಗರದ ಹೊರವಲಯದಲ್ಲಿರುವ ಗ್ರಾಮ ಗಂಗೋತ್ರಿ ಆವರಣದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕೌಶಲ್ಯ ವಿಕಾಸ ಭವನದ ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತೆ ತನುಜಾ ನಾಯಕ ಅವರಿಗೆ ಪ್ರದಾನ ಮಾಡಿ ಮಾತನಾಡಿದರು.
ಮಾತೋಶ್ರೀ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಈ ಕಾರ್ಯಕ್ರಮದ ನೈತಿಕ ಶಕ್ತಿಯಾಗಿದ್ದಾರೆ. ಈ ತಾಯಿಯ ಕಾಳಜಿ, ಸಂಸ್ಕಾರ ಮತ್ತು ಕನವರಿಕೆಗಳನ್ನು ಅಕ್ಷರಕ್ಕೆ ಇಳಿಸುತ್ತಾ ಇವರ ಹೆಸರಿನ ಪ್ರಶಸ್ತಿ ಸ್ವೀಕರಿಸುತ್ತಿರುವ ಸುನಂದಾ ನಾಯಕ ಅವರ ಆಯ್ಕೆ ಅತ್ಯಂತ ಸೂಕ್ತವಾಗಿದೆ. ಇವತ್ತಿನ ಈ ಕಾರ್ಯಕ್ರಮವೇ ಅವ್ವ ಗುರುವ್ವ ಅವರ ಸಂಸ್ಕಾರ ಮತ್ತು ಚೈತನ್ಯದ ಜೀವಂತಿಕೆಗೆ ಸಾಕ್ಷಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ಕೇಂದ್ರ ಸರ್ಕಾರ ನೋಟು ನಿಷೇಧ ಜಾರಿಗೆ ತಂದಾಗ ನಗರ ಕೇಂದ್ರಿತ ಆರ್ಥಿಕತೆ, ದುಡಿಮೆ ಎಲ್ಲಾ ನೆಲಕಚ್ಚಿತು. ಆದರೆ, ಇಡೀ ದೇಶದ ಆರ್ಥಿಕತೆ ಪೂರ್ತಿ ನೆಲ ಕಚ್ಚದಂತೆ ಕಾಪಾಡಿದ್ದು ನಮ್ಮ ಗ್ರಾಮೀಣ ಆರ್ಥಿಕತೆ. ಸಾಸಿವೆ ಡಬ್ಬಿ, ಎಲೆ ಅಡಿಕೆ ಚೀಲದಲ್ಲಿ ಗ್ರಾಮೀಣ ಮಹಿಳೆಯರು ಕಾಪಿಡುವ ಉಳಿತಾಯ ಮಾಡುವ ಹಣ ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕುಟುಂಬಗಳ ಬದುಕಿಗೆ ಆಸರೆ ಆಗಿದ್ದನ್ನು ನಾವು ನೆನಪಿಸಿಕೊಳ್ಳಬೇಕು. ಹೀಗಾಗಿ ಭಾರತದ ಗ್ರಾಮೀಣಾಭಿವೃದ್ಧಿಗೆ ಪತ್ರಿಕೋದ್ಯಮ ಸೇತುವೆಯಾಗಿ ಕೆಲಸ ಮಾಡಬೇಕಿದೆ ಎಂದರು.
ಮುಖ್ಯಮಂತ್ರಿಗಳು ಯಾವುದೇ ಜಿಲ್ಲೆಯ ಕೆಡಿಪಿ ಸಭೆಗಳನ್ನು ನಡೆಸುವಾಗ ಆಯಾ ಜಿಲ್ಲೆಗಳ ಗ್ರಾಮೀಣ ಬದುಕಿನ ಬಗ್ಗೆ ಪತ್ರಿಕೆಗಳಲ್ಲಿ ಬಂದಿರುವ ವರದಿಗಳನ್ನು ಮೊದಲು ಗಮಿಸುತ್ತಾರೆ. ಕೊರತೆಗಳ ಬಗ್ಗೆ ವರದಿಯಾಗಿದ್ದರೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಳ್ಳುವುದನ್ನು ನೀವೂ ಗಮನಿಸಿರುತ್ತೀರಿ. ಕಲುಷಿತ ನೀರು ಕುಡಿದು ಸಾವನ್ನಪ್ಪಿದ ವರದಿಗಳು ಸರ್ಕಾರವನ್ನು ಎಚ್ಚರಿಸಿವೆ. ಬೆಳೆ ರೋಗದ ಬಗ್ಗೆ ಬಂದ ವರದಿಗಳು ಸಾವಿರಾರು ರೈತ ಕುಟುಂಬಗಳಿಗೆ ಪರಿಹಾರ ಒದಗಿಸಲು ನೆರವಾಗಿವೆ ಎಂದರು.
ಪತ್ರಿಕೋದ್ಯಮವು ಸಮಾಜದ ಕನ್ನಡಿಯಾಗಿದ್ದರೆ, ಆ ಕನ್ನಡಿಯಲ್ಲಿ ಭಾರತದ ಶೇ. 70 ಜನಸಂಖ್ಯೆ ಇರುವ ಹಳ್ಳಿಗಳು ಕಾಣಿಸಬೇಕು. ಹೀಗಾಗಿ ಇಂಥಾ ವಿಶ್ಲೇಷಣೆಗಳು ಜನರ ಧ್ವನಿಯಾಗಿ ಗ್ರಾಮೀಣ ಭಾರತವನ್ನು ಬೆಳೆಸಬೇಕು. ಜೊತೆಗೆ ಹಳ್ಳಿಗಳ ಕಲೆ, ಸಂಸ್ಕೃತಿ, ಭಾಷೆ ಮತ್ತು ಅಲ್ಲಿನ ಜನರ ದೈನಂದಿನ ಹೋರಾಟಗಳಿಗೂ ಕನ್ನಡಿ ಹಿಡಿಯಬೇಕು. ಈ ಕನ್ನಡಿಯಲ್ಲಿ ವಿಧಾನಸೌಧದಲ್ಲಿ ಕುಳಿತಿರುವ ಅಧಿಕಾರಿಗಳು ಮುಖ ನೋಡಿಕೊಳ್ಳಬೇಕು ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಗದಗ ಜಿಲ್ಲಾಧ್ಯಕ್ಷ ರಾಜು ಎಂ.ಹೆಬ್ಬಳ್ಳಿ ಅಧ್ಯಕ್ಷತೆ ವಹಿಸಿದ್ದರು. ಸಭಾಪತಿ ಬಸವರಾಜ ಹೊರಟ್ಟಿ, ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಕುಲಪತಿ (ಪ್ರ) ಹಾಗೂ ಕುಲಸಚಿವ ಪ್ರೊ. ಸುರೇಶ ನಾಡಗೌಡರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ನಿಂಗಪ್ಪ ಚಾವಡಿ, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ಬಿ.ಬಿ. ಅಸೂಟಿ, ಅವ್ವ ಸೇವಾ ಟ್ರಸ್ಟ್ ಜಿಲ್ಲಾ ಸಂಚಾಲಕ ಬಸವರಾಜ ಧಾರವಾಡ, ಪ್ರಶಸ್ತಿ ಪುರಸ್ಕೃತ ತನುಜಾ ನಾಯಕ, ಜಿಲ್ಲಾ ವಾರ್ತಾಧಿಕಾರಿ ವಸಂತ ಮಡ್ಲೂರು, ಕಾ.ನಿ.ಪ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಅರುಣಕುಮಾರ ಹಿರೇಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣು ದೊಡ್ಡೂರ ಸೇರಿದಂತೆ ಸಂಘದ ಪದಾಧಿಕಾರಿಗಳು, ಜಿಲ್ಲೆಯ ಪತ್ರಕರ್ತರು, ವಿದ್ಯಾರ್ಥಿಗಳು ಇದ್ದರು.
ಆದರ್ಶಪ್ರಾಯ ಅವ್ವನ ಹೆಸರಿನ ಪ್ರಶಸ್ತಿಗೆ ತನುಜಾ ನಾಯಕ ಅವರನ್ನು ಆಯ್ಕೆ ಮಾಡಿರುವುದು ಹೆಚ್ಚು ಸೂಕ್ತವಾಗಿದೆ. ಮಹಿಳಾ ಸಂವೇದನೆ, ಕೌಟುಂಬಿಕ ಮೌಲ್ಯಗಳು, ಸಾಮಾಜಿಕ ಜಾಗೃತಿ ಮತ್ತು ಜೀವನ ಪ್ರೀತಿಯನ್ನು ಸಾರುವಂತಹ ಲೇಖನಗಳನ್ನು ನಿರಂತರವಾಗಿ ಬರೆಯುತ್ತಿರುವ ತನುಜಾ ನಾಯಕ ಅವರ ಸಾಮಾಜಿಕ ನೋಟ ಇವತ್ತಿನ ಕಿರಿಯ ವೃತ್ತಿ ಬಾಂಧವರಿಗೆ ಮಾದರಿಯಾಗಿದ್ದಾರೆ.
-
ಕೆ.ವಿ. ಪ್ರಭಾಕರ.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರು.



