ವಿಜಯಸಾಕ್ಷಿ ಸುದ್ದಿ, ಕೊಟ್ಟೂರು: ತಾಲೂಕು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯೇ ಇಲ್ಲದೆ ಪ್ರಯಾಣಿಕರು ದಿನನಿತ್ಯ ತೊಂದರೆ ಅನುಭವಿಸುವಂತಾಗಿದೆ. ಈ ನಿರ್ಲಕ್ಷ್ಯದಿಂದ ಬೇಸತ್ತು ಸಾರ್ವಜನಿಕರು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಸರ್ಕಾರಿ ಬಸ್ ತಂಗುದಾಣವಾಗಿದ್ದರೂ ಶುದ್ಧ ಕುಡಿಯುವ ನೀರಿನ ಘಟಕವೇ ಇಲ್ಲದಿರುವುದು ಆಶ್ಚರ್ಯಕಾರಿಯಾಗಿದೆ. ದೂರದ ಊರುಗಳಿಂದ ಬರುವ ಮಹಿಳೆಯರು, ವೃದ್ಧರು, ಮಕ್ಕಳು ಸೇರಿದಂತೆ ಅನೇಕ ಪ್ರಯಾಣಿಕರು ನೀರಿನ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ.
ಸ್ಥಿತಿವಂತರು ಹಾಗೂ ಮಧ್ಯಮ ವರ್ಗದವರು ಹಣ ನೀಡಿ ಅಂಗಡಿಗಳಲ್ಲಿ ಸಿಗುವ ಬಾಟಲ್ ನೀರನ್ನು ಖರೀದಿಸಿ ದಾಹ ತೀರಿಸಿಕೊಳ್ಳುವ ಪರಿಸ್ಥಿತಿ ಇದೆ. ಆದರೆ ಹಳ್ಳಿಗಳಿಂದ ಕೂಲಿ ಕೆಲಸಕ್ಕಾಗಿ ಪಟ್ಟಣಕ್ಕೆ ಬರುವ ಬಡ ಕಾರ್ಮಿಕರು ದುಡ್ಡು ಕೊಟ್ಟು ನೀರು ಖರೀದಿಸಲು ಸಾಧ್ಯವಾಗದೆ ಸಣ್ಣಪುಟ್ಟ ಹೋಟೆಲ್ಗಳನ್ನು ಅವಲಂಬಿಸುವಂತಾಗಿದೆ.
ಹಲವು ವರ್ಷಗಳಿಂದಲೂ ಈ ಸಮಸ್ಯೆ ಮುಂದುವರಿದಿದ್ದರೂ ಸಂಬಂಧಿಸಿದ ಅಧಿಕಾರಿಗಳು ಯಾವುದೇ ಶಾಶ್ವತ ಪರಿಹಾರಕ್ಕೆ ಮುಂದಾಗಿಲ್ಲ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಇನ್ನಾದರೂ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡು ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಪ್ರಯಾಣಿಕರ ಮೂಲಭೂತ ಅಗತ್ಯವನ್ನು ಪೂರೈಸಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.



