ಬೆಂಗಳೂರು: ಜಿಬಿಎ ಚುನಾವಣೆ ಮೇ ತಿಂಗಳಲ್ಲಿ ನಡೆಯಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 6ರಂದು ಚುನಾವಣೆಗೆ ಸಂಬಂಧಿಸಿದ ಅಧಿಸೂಚನೆ ಹೊರಡಿಸಲಾಗುತ್ತದೆ. ಅದರ ಬಳಿಕ ಒಂದು ತಿಂಗಳೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಕರಗ ಉತ್ಸವದ ಬಗ್ಗೆ ಮಾತನಾಡಿದ ಸಚಿವರು, ಸಿ ಗ್ರೇಡ್ ದೇವಾಲಯಗಳ ಅಭಿವೃದ್ಧಿಗಾಗಿ ವಿಷನ್ ಗ್ರೂಪ್ ರಚಿಸಲಾಗಿದ್ದು, ಅದರ ಸಭೆಯನ್ನು ಇಂದು ಕರೆದಿದ್ದೇವೆ ಎಂದು ಹೇಳಿದರು. ಮುಜರಾಯಿ ಇಲಾಖೆಯ ಆಸ್ತಿಗಳನ್ನು ಮತ್ತೆ ಸುಪರ್ದಿಗೆ ಪಡೆಯುವ ಕಾರ್ಯ ನಡೆಯುತ್ತಿದ್ದು, ಆಸ್ತಿ ಹಿಂಡೀಕರಣ ಮತ್ತು ಗೆಜೆಟ್ ಪ್ರಕ್ರಿಯೆಯೂ ಮುಂದುವರಿದಿದೆ. ಈ ಕುರಿತು ಕಂದಾಯ ಇಲಾಖೆಗೆ ಸೂಚನೆ ನೀಡಲಾಗಿದೆ.
ಗ್ರಾಮೀಣ ಭಾಗದಲ್ಲಿ ಸಿ ಗ್ರೇಡ್ ದೇವಸ್ಥಾನಗಳ ದತ್ತು ಪ್ರಕ್ರಿಯೆ ಸರಳೀಕರಣಕ್ಕೂ ನಿರ್ಧಾರ ಕೈಗೊಳ್ಳಲಾಗಿದೆ. ದೇವಸ್ಥಾನಗಳ ಆಸ್ತಿಗೆ ಜಿಯೋ ಫೆನ್ಸಿಂಗ್ ವ್ಯವಸ್ಥೆ ಜಾರಿಗೆ ತರಲು ಯೋಜಿಸಲಾಗಿದೆ.
ಬೆಂಗಳೂರು ಕರಗ ಏಪ್ರಿಲ್ 1ರಂದು ನಡೆಯಲಿದೆ. ಎಂಟು ಸದಸ್ಯರ ಸಮಿತಿ ರಚನೆಯಾಗಿದ್ದು, ನಾರಾಯಣಸ್ವಾಮಿ ಅಧ್ಯಕ್ಷರಾಗಿದ್ದಾರೆ. ಟೆಂಡರ್ ಪ್ರಕ್ರಿಯೆಯನ್ನು ಮುಜರಾಯಿ ಇಲಾಖೆ ನಡೆಸುವುದಿಲ್ಲ; ಎಲ್ಲಾ ಹೊಣೆಗಾರಿಕೆ ಜಿಬಿಎಗೆ ವಹಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಮೈಸೂರು ಬ್ಯಾಂಕ್ ಸರ್ಕಲ್, ಅವಿನ್ಯೂ ರೋಡ್, ಹಡ್ಸನ್ ಸರ್ಕಲ್ ಹಾಗೂ ಕಾಟನ್ ಪೇಟೆ ಪ್ರದೇಶಗಳಲ್ಲಿ ವಿದ್ಯುತ್ ದೀಪಾಲಂಕಾರ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಕುರಿತು ಚಿಂತನೆ ನಡೆಯುತ್ತಿದ್ದು, ಮೈಸೂರು ದಸರಾ ಮಾದರಿಯಲ್ಲಿ ಉತ್ಸವವನ್ನು ನಡೆಸಲು ಯೋಜನೆ ರೂಪಿಸಲಾಗಿದೆ.
ಭದ್ರತಾ ಕ್ರಮಗಳ ಕುರಿತು ಪೊಲೀಸರಿಗೆ ಅಗತ್ಯ ಜಾಗ ಸೂಚಿಸಲಾಗಿದೆ. ಜಿಬಿಎಗೆ ನೀಡಲಾಗುವ ಅನುದಾನವನ್ನು ಅವರೇ ಖರ್ಚು ಮಾಡುವ ಹೊಣೆಗಾರಿಕೆ ವಹಿಸಿಕೊಳ್ಳಲಿದ್ದಾರೆ ಎಂದು ಸಚಿವರು ಸ್ಪಷ್ಟಪಡಿಸಿದರು.



