ವಿಜಯಸಾಕ್ಷಿ ಸುದ್ದಿ, ಗದಗ:
ರಾಜ್ಯದಲ್ಲಿ ಓಮಿಕ್ರಾನ್ ಅಷ್ಟೇ ಅಲ್ಲ, ಡೆಲ್ಟಾನೂ ಇದೆ. ಅಲ್ಲದೇ, ಶಾಲಾ ಕಾಲೇಜು ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ತೀವ್ರ ನಿಗಾವಹಿಸಲಾಗುತ್ತಿದೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು.
ಸೋಮವಾರ ಗದಗನಲ್ಲಿ ಬಿಜೆಪಿ ಪ್ರಚಾರ ಸಭೆಗೂ ಮುನ್ನ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಚಿಕ್ಕಮಗಳೂರಿನಲ್ಲಿ ಓರ್ವ ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ 400 ವಿದ್ಯಾರ್ಥಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 68 ಮಕ್ಕಳಿಗೆ ಸೋಂಕು ದೃಢವಾಗಿದೆ ಎಂದರು.
ಶಾಲಾ ಕಾಲೇಜಿನಲ್ಲಿ ಯಾರಿಗಾದರೂ ಕೋವಿಡ್ ಲಕ್ಷಣಗಳಿದ್ದರೆ ಕೂಡಲೇ ಪರೀಕ್ಷಿಸಲು ಸೂಚಿಸಲಾಗಿದೆ. ಎಲ್ಲೆಲ್ಲಿ ವಸತಿ ನಿಲಯಗಳಿವೆ, ಎಲ್ಲಿ ದೊಡ್ಡ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದಾರೋ ಅಲ್ಲಿ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ನಿಗಾವಹಿಸಲಿದೆ. ಈ ಬಗ್ಗೆ ತಜ್ಞರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು.
ಈ ಸಂದರ್ಭದಲ್ಲಿ ಸಚಿವ ಸಿ.ಸಿ ಪಾಟೀಲ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಂಸದ ಶಿವಕುಮಾರ್ ಉದಾಸಿ, ಶಾಸಕರಾದ ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ, ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಸೇರಿದಂತೆ ಅನೇಕರು ಇದ್ದರು.