ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಮುಸುಕುದಾರಿ ಕಳ್ಳರ ಗ್ಯಾಂಗ್ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ಭೀತಿ ಉಂಟು ಮಾಡಿದೆ. ಕಳೆದ ಒಂದು ವಾರದಿಂದ ಕೇಶವ ಪಾರ್ಕ್ ಮತ್ತು ಪುಟ್ಟರಾಜ ಬಡಾವಣೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮನೆ ಕಳ್ಳತನ ಹಾಗೂ ಕಳ್ಳತನ ಯತ್ನ ಪ್ರಕರಣಗಳು ನಡೆದಿವೆ.
ರಾತ್ರಿ ವೇಳೆಯಲ್ಲಿ ಮುಖಕ್ಕೆ ಮುಸುಕು ಹಾಕಿಕೊಂಡು, ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಸಂಚರಿಸುತ್ತಿರುವ ಐದು ಜನರ ಗ್ಯಾಂಗ್ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಈ ದೃಶ್ಯಗಳು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿವೆ.
ಪುಟ್ಟರಾಜ ಬಡಾವಣೆ ನಿವಾಸಿಯಾದ ಶಿಕ್ಷಕಿ ವಿಜಯಲಕ್ಷ್ಮಿ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಕುಟುಂಬದವರು ಸಂಬಂಧಿಕರ ಮನೆಯಲ್ಲಿ ಇದ್ದ ಸಂದರ್ಭವನ್ನು ಸದುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬಾಗಿಲಿನ ಲಾಕ್ ಮುರಿದು ಒಳನುಗ್ಗಿದ್ದಾರೆ.
ಸುಮಾರು 70 ಗ್ರಾಂ ಚಿನ್ನ, 250 ಗ್ರಾಂ ಬೆಳ್ಳಿ ಆಭರಣಗಳು ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ. ಈ ಕುರಿತು ಬೆಟಗೇರಿ-ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಸ್ಥಳೀಯ ನಿವಾಸಿಗಳು ಕಳ್ಳರ ಹಾವಳಿ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಮನೆಗಳಿಗೆ ಸಿಸಿಟಿವಿ ಅಳವಡಿಸುವಂತೆ ಸೂಚಿಸಲಾಗಿದೆ. ಆದಾಗ್ಯೂ, ಕಳ್ಳತನ ಪ್ರಕರಣಗಳು ಮುಂದುವರಿದಿರುವುದರಿಂದ ಜನರು ಭಯಭೀತರಾಗಿದ್ದಾರೆ. ರಾತ್ರಿ ಹೊತ್ತಿನಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಸಂಚರಿಸುತ್ತಿರುವ ಈ ಗ್ಯಾಂಗ್ ವಿರುದ್ಧ ತಕ್ಷಣ ಕ್ರಮ ಕೈಗೊಂಡು ಆರೋಪಿಗಳನ್ನು ಬಂಧಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.



