ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಕುರಿತು ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎನ್. ನಾರಾಯಣಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ನಾರಾಯಣಗೌಡ, “ಹಿಂದಿ ಸಾಮ್ರಾಜ್ಯಶಾಹಿ ಲಾಬಿಯ ಪರವಾಗಿ ಮಾತನಾಡುತ್ತಿರುವುದು ಸ್ಪಷ್ಟ. ಕನ್ನಡಿಗರ ತೆರಿಗೆ ಹಣದಿಂದ ನಡೆಯುವ ರಾಜಭವನದಲ್ಲಿ ಇದ್ದು, ತಿಂದ ಮನೆಗೆ ಕನ್ನ ಹಾಕಬೇಡಿ” ಎಂದು ಕಿಡಿಕಾರಿದ್ದಾರೆ.
ರಾಜ್ಯಪಾಲರು ಬರೆದಿರುವ ಪತ್ರದ ಬಗ್ಗೆ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ಅವರು, “ಈ ರೀತಿಯ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತದ್ದು. ರಾಜ್ಯಪಾಲರು ಸರ್ಕಾರದ ಪದನಿಮಿತ್ತ ಮುಖ್ಯಸ್ಥರು ಎಂಬುದನ್ನು ಮರೆತಿದ್ದಾರೆ” ಎಂದು ಟೀಕಿಸಿದರು.
ಮುಂದುವರೆದು, “ಜನರಿಂದ ನೇರವಾಗಿ ಆಯ್ಕೆಯಾದ ಪ್ರತಿನಿಧಿಯಲ್ಲದ ರಾಜ್ಯಪಾಲರಿಗೆ ದೈನಂದಿನ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವ ಯಾವುದೇ ನೈತಿಕ ಅಥವಾ ಸಾಂವಿಧಾನಿಕ ಅಧಿಕಾರವಿಲ್ಲ” ಎಂದು ಹೇಳಿದರು. ಈ ರೀತಿಯ ನಡೆ ಮುಂದುವರೆದರೆ “ಗಂಟುಮೂಟೆ ಕಟ್ಟಿಕೊಂಡು ತಮ್ಮ ರಾಜ್ಯಕ್ಕೆ ಹಿಂತಿರುಗುವಂತೆ ಹೇಳಬೇಕಾಗುತ್ತದೆ” ಎಂದು ನಾರಾಯಣಗೌಡ ತೀವ್ರ ಎಚ್ಚರಿಕೆ ನೀಡಿದ್ದಾರೆ.



