ನವದೆಹಲಿ: ಅಪಾರ ಪ್ರಮಾಣದ ನಗದು ಪತ್ತೆಯಾದ ಪ್ರಕರಣದಲ್ಲಿ ಸುದ್ದಿಯಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಷ್ಟ್ರಪತಿಗಳಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ದೆಹಲಿ ಹೈಕೋರ್ಟ್ನಲ್ಲಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರ ಅಧಿಕೃತ ನಿವಾಸದಲ್ಲಿ ದೊಡ್ಡ ಪ್ರಮಾಣದ ನಗದು ಪತ್ತೆಯಾಗಿತ್ತು. ಈ ಆರೋಪಗಳ ಹಿನ್ನೆಲೆ ಕಳೆದ ವರ್ಷ ಏಪ್ರಿಲ್ನಲ್ಲಿ ಅವರನ್ನು ದೆಹಲಿ ಹೈಕೋರ್ಟ್ನಿಂದ ಅಲಹಾಬಾದ್ ಹೈಕೋರ್ಟ್ಗೆ ವರ್ಗಾಯಿಸಲಾಗಿತ್ತು. ಪ್ರಸ್ತುತ ಅವರು ಆಂತರಿಕ ವಿಚಾರಣೆಯನ್ನು ಎದುರಿಸುತ್ತಿದ್ದರು.
2025ರ ಮಾರ್ಚ್ನಲ್ಲಿ ದೆಹಲಿಯ ನಿವಾಸದಲ್ಲಿ ಸಂಭವಿಸಿದ ಅಗ್ನಿ ಅವಘಡದ ವೇಳೆ ಸುಟ್ಟ ಹಾಗೂ ಅರ್ಧ ಸುಟ್ಟ ಸ್ಥಿತಿಯಲ್ಲಿದ್ದ ನಗದು ಕಟ್ಟುಗಳು ಪತ್ತೆಯಾಗಿದ್ದು ಪ್ರಕರಣಕ್ಕೆ ಹೊಸ ತಿರುವು ನೀಡಿತ್ತು.
ಈ ಬೆಳವಣಿಗೆಗಳ ಬಳಿಕ ಅವರ ವಿರುದ್ಧ ಮಹಾಭಿಯೋಗ ಪ್ರಕ್ರಿಯೆ ಆರಂಭಿಸಲು ಲೋಕಸಭಾ ಸ್ಪೀಕರ್ ತನಿಖಾ ಸಮಿತಿಯನ್ನು ರಚಿಸಿದ್ದರು. ಈ ತನಿಖೆಯನ್ನು ಪ್ರಶ್ನಿಸಿ ನ್ಯಾಯಮೂರ್ತಿ ವರ್ಮಾ ಸುಪ್ರೀಂ ಕೋರ್ಟ್ ಮೊರೆ ಹೋದರೂ, ನ್ಯಾಯಾಲಯವು ಅವರ ಮನವಿಯನ್ನು ತಿರಸ್ಕರಿಸಿ ತನಿಖೆಗೆ ತಡೆ ನೀಡಲು ನಿರಾಕರಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಇದೀಗ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಗಮನಾರ್ಹವಾಗಿದೆ.



