ಮಂಗಳೂರು: ಧರ್ಮಸ್ಥಳ ಪ್ರಕರಣದ ಹಿನ್ನೆಲೆ ಸುದ್ದಿಯಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಇದೀಗ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ. ‘ಬುರುಡೆ ಗ್ಯಾಂಗ್’ ಎಂಬ ಯಕ್ಷಗಾನ ಪ್ರಸಂಗದ ವಿಚಾರವಾಗಿ ಯಕ್ಷಗಾನ ಕಲಾವಿದರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಆರೋಪ ಅವರ ವಿರುದ್ಧ ಕೇಳಿಬಂದಿದೆ.
ಈ ಸಂಬಂಧ ಪುತ್ತೂರು ಮಹಿಳಾ ಠಾಣೆ ಹಾಗೂ ಗ್ರಾಮಾಂತರ ಠಾಣೆಗಳಲ್ಲಿ ತಿಮರೋಡಿ ವಿರುದ್ಧ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಧರ್ಮಸ್ಥಳ ಪ್ರಕರಣದಂತೆ ಕಥಾವಸ್ತು ಹೊಂದಿರುವ ‘ಬುರುಡೆ ಗ್ಯಾಂಗ್’ ಯಕ್ಷಗಾನ ಪ್ರಸಂಗ ನಿರ್ಮಾಣಗೊಂಡಿತ್ತು.
ಇದರಿಂದ ಅಸಮಾಧಾನಗೊಂಡ ತಿಮರೋಡಿ ಏಪ್ರಿಲ್ 11ರಂದು ಯಕ್ಷಗಾನ ಹಾಸ್ಯ ಕಲಾವಿದ ಪ್ರಜ್ವಲ್ ಗುರುನಾಯನಕೆರೆಗೆ ಕರೆ ಮಾಡಿ, ಕಲಾವಿದರಾದ ದಿನೇಶ್ ಶೆಟ್ಟಿಗಾರ್ ಮತ್ತು ನಟ ಮಂದಾರ ಸುಂದರ ರೈ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎನ್ನಲಾಗಿದೆ. ಅವರ ತಾಯಂದಿರ ಕುರಿತು ಕೂಡ ಅವಮಾನಕಾರಿ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಕರೆಗಿನ ಆಡಿಯೋವನ್ನು ಪ್ರಜ್ವಲ್ ಅವರು ಸಂಬಂಧಿತ ಕಲಾವಿದರಿಗೆ ಕಳುಹಿಸಿದ್ದು, ಅದನ್ನು ಕೇಳಿ ಅವರು ಮನಸ್ತಾಪಗೊಂಡಿದ್ದಾರೆ. ಈ ಹಿನ್ನೆಲೆ ಮಂದಾರ ಸುಂದರ ರೈ ನೀಡಿದ ದೂರಿನಡಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ FIR ದಾಖಲಾಗಿದ್ದು, ದಿನೇಶ್ ಶೆಟ್ಟಿಗಾರ್ ತಾಯಿ ಲೀಲಾವತಿ ಶೆಟ್ಟಿಗಾರ್ ನೀಡಿದ ದೂರಿನಡಿ ಮಹಿಳಾ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.
ಆಡಿಯೋದಲ್ಲಿರುವ ವಿಷಯ:
ಆಡಿಯೋದಲ್ಲಿ ತಿಮರೋಡಿ ಯಕ್ಷಗಾನ ಕಲಾವಿದರ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು ಕೇಳಿಸುತ್ತದೆ. “ಒಂದು ಮಗುವಿಗೆ ಅನ್ಯಾಯವಾಗಿರುವ ವಿಷಯದಲ್ಲಿ ನಾವು ಹೋರಾಟ ಮಾಡುತ್ತಿದ್ದೇವೆ. ಅದನ್ನು ಹಾಸ್ಯ ಮಾಡುವುದು ಸರಿಯಲ್ಲ. ಯಕ್ಷಗಾನಕ್ಕೆ ತನ್ನದೇ ಆದ ಗೌರವವಿದೆ, ಇಂತಹ ಕಥೆ ಮಾಡುವ ಮೊದಲು ಜಾಗ್ರತೆ ಇರಬೇಕು” ಎಂದು ಹೇಳಿದ್ದಾರೆ ಎನ್ನಲಾಗಿದೆ. ಸದ್ಯ ಈ ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.



