ಚಾಮರಾಜನಗರ: ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಅರಣ್ಯ ನಾಶವಾಗಿರುವ ಘಟನೆ ವರದಿಯಾಗಿದೆ.
ಲೊಕ್ಕನಹಳ್ಳಿ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡ ಬೆಂಕಿ ವೇಗವಾಗಿ ವ್ಯಾಪಿಸಿದ್ದು, ಅರಣ್ಯಾಧಿಕಾರಿಗಳು, ಸಿಬ್ಬಂದಿ ಹಾಗೂ ಬೆಂಕಿ ವಾಚರ್ಗಳು ಸ್ಥಳಕ್ಕೆ ದೌಡಾಯಿಸಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿಯಿಂದ ಎಷ್ಟು ಎಕರೆ ಅರಣ್ಯ ಹಾನಿಯಾಗಿದೆ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ಕಳೆದ ಕೆಲವು ದಿನಗಳಿಂದಲೂ ಈ ಭಾಗದಲ್ಲಿ ನಿರಂತರವಾಗಿ ಕಾಡು ಬೆಂಕಿ ಕಾಣಿಸಿಕೊಂಡಿದ್ದು, ಬೈಲೂರು ಮತ್ತು ಕೊಳ್ಳೇಗಾಲ ವಲಯಗಳಲ್ಲಿ ಹಲವು ಬಾರಿ ಬೆಂಕಿ ಅವಘಡ ಸಂಭವಿಸಿ ನೂರಾರು ಎಕರೆ ಅರಣ್ಯ ಪ್ರದೇಶ ಹಾನಿಗೊಳಗಾಗಿದೆ.
ಅರಣ್ಯದಂಚಿನ ಗ್ರಾಮಗಳು ಹಾಗೂ ಹಾಡಿಗಳಲ್ಲಿ ಜಾಗೃತಿ ಮೂಡಿಸಿದರೂ ಸಹ ಬೆಂಕಿ ಘಟನೆಗಳು ಮುಂದುವರಿಯುತ್ತಿರುವುದು ಅರಣ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಪರಿಸರ ಪ್ರಿಯರು ಹಾಗೂ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.



