ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನರ್ರಚನೆ ಕುರಿತು ಮೇ ಎರಡನೇ ವಾರದಲ್ಲಿ ‘ಸಿಹಿ ಸುದ್ದಿ’ ಸಿಗುವ ಭರವಸೆ ಹೈಕಮಾಂಡ್ ನೀಡಿದೆ ಎಂದು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ್ ಪಟ್ಟಣ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಪ್ರತಿನಿಧಿ ಸುರ್ಜೇವಾಲ ಅವರು ಮೇ ಎರಡನೇ ವಾರದಲ್ಲಿ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಆ ನಿರೀಕ್ಷೆಯಲ್ಲೇ ನಾವು ಇದ್ದೇವೆ ಎಂದು ಹೇಳಿದರು.
ಮೇ 4ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬರುವುದಿದ್ದು, ಅದರ ನಂತರ ಸುಮಾರು 40 ಮಂದಿ ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಯಾಗಿ ಮತ್ತೊಮ್ಮೆ ಮನವಿ ಮಾಡುವ ಯೋಜನೆ ಇದೆ ಎಂದು ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಸಿಹಿ ಸುದ್ದಿ’ ನೀಡುವುದೇ ಅಥವಾ ಇಲ್ಲವೇ ಎಂಬುದು ಹೈಕಮಾಂಡ್ ನಿರ್ಧಾರವಾಗಿದ್ದು, ಅವರಿಗೆ ಮುಂಗಡ ಶುಭಾಶಯಗಳನ್ನು ತಿಳಿಸುತ್ತೇನೆ. ಸಂಪುಟ ಪುನರ್ರಚನೆ ಆಗಲೇಬೇಕು ಎಂಬುದು ನಮ್ಮ ಆಗ್ರಹ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ವಿಚಾರದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ವೆಂಟಿಲೇಟರ್ನಲ್ಲಿ ಇರುವ ವ್ಯಕ್ತಿ ಬಗ್ಗೆ ಈ ರೀತಿಯ ಹೇಳಿಕೆ ನೀಡುವುದು ಮಾನವೀಯತೆಗೆ ವಿರುದ್ಧವಾಗಿದೆ ಎಂದು ಕಿಡಿಕಾರಿದರು.



