ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು “ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ” ಎಂದು ಸ್ಪಷ್ಟಪಡಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಎಲ್ಲಾ ಚರ್ಚೆಗಳಿಗೆ ತೆರೆ ಬಿದ್ದಂತಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಖರ್ಗೆ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದು ಅಪಾರ ರಾಜಕೀಯ ಅನುಭವ ಹೊಂದಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಎಂಬ ಪ್ರಶ್ನೆ ಎದುರಾದರೆ, ಖರ್ಗೆ ಅವರಂತಹ ಅನುಭವಿಗಳ ಮಾತಿಗೆ ವಿಶೇಷ ಮಹತ್ವ ಇರುತ್ತದೆ. ಅವರು ಸದ್ಯಕ್ಕೆ ಮುಖ್ಯಮಂತ್ರಿ ಇದ್ದಾರೆ, ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಇದರಿಂದ ಸ್ಪಷ್ಟ ಸಂದೇಶ ಸಿಕ್ಕಿದೆ,” ಎಂದು ಪರಮೇಶ್ವರ್ ತಿಳಿಸಿದರು.
ಖರ್ಗೆ ಅವರ ಹೇಳಿಕೆಯನ್ನು ಸ್ವಾಗತಿಸುವುದಾಗಿ ಹೇಳಿದ ಅವರು, ಈ ಅಭಿಪ್ರಾಯವು ಕಾಂಗ್ರೆಸ್ ಹಿರಿಯ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಚರ್ಚಿಸಿದ ಬಳಿಕವೇ ಹೊರಬಂದಿರಬಹುದು ಎಂದು ಅಭಿಪ್ರಾಯಪಟ್ಟರು.
ಖರ್ಗೆ ಅವರು ಹೇಳಿದ ಮಾತಿಗೆ ಪಕ್ಷದಲ್ಲಿ ಬಹಳ ಪ್ರಾಮುಖ್ಯತೆ ಇದೆ. ಹೀಗಾಗಿ ಸಿಎಂ ಬದಲಾವಣೆ ಕುರಿತ ಚರ್ಚೆ ಇಲ್ಲಿಗೇ ಮುಕ್ತಾಯವಾದಂತಾಗಿದೆ,” ಎಂದು ಹೇಳಿದರು.
ಇನ್ನೂ ಕೆಲವರು ವಿಭಿನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, “ನಮ್ಮ ದೃಷ್ಟಿಯಲ್ಲಿ ಖರ್ಗೆ ಅವರು ಸುಪ್ರೀಂ ಅಥಾರಿಟಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಹೈಕಮಾಂಡ್ ಪರವಾಗಿ ಬರುವ ಹೇಳಿಕೆಯನ್ನು ಎಲ್ಲರೂ ಗೌರವಿಸಬೇಕು. ಇದರ ಬಗ್ಗೆ ಇನ್ನಷ್ಟು ವ್ಯಾಖ್ಯಾನ ಮಾಡುವ ಅಗತ್ಯವಿಲ್ಲ,” ಎಂದು ಸ್ಪಷ್ಟಪಡಿಸಿದರು.



