ಹುಬ್ಬಳ್ಳಿ: ವ್ಯಾಪಾರ ಮತ್ತು ಶಿಕ್ಷಣದ ಹಬ್ ಆಗಿರುವ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆಯೇ ಪ್ರಶ್ನಾರ್ಥಕವಾಗಿದೆ. ಪೊಲೀಸರೇ ಹಣಕ್ಕಾಗಿ ಜನರನ್ನು ಪೀಡಿಸುತ್ತಿದ್ದಾರೆ, ಅಕ್ರಮ ದಂಧೆಗಳಿಗೆ ಬೆಂಬಲ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿವೆ.
ಈ ಕುರಿತು ಹುಬ್ಬಳ್ಳಿ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಅವಳಿ ನಗರದಲ್ಲಿ ಪೊಲೀಸ ಇಲಾಖೆಯಲ್ಲಿ ಏನೂ ಸರಿಯಿಲ್ಲ. ಕೆಲವರು ರಿಯಲ್ ಎಸ್ಟೇಟ್ ದಂಧೆಗಳಲ್ಲಿ ತೊಡಗಿಸಿಕೊಂಡು, ಅಕ್ರಮ ಚಟುವಟಿಕೆಗಳಿಗೆ ಕೈಜೋಡಿಸುತ್ತಿದ್ದಾರೆ” ಎಂದು ಅವರು ಕಿಡಿಕಾರಿದ್ದಾರೆ.
ಧಾರವಾಡದಲ್ಲಿ ವಿದ್ಯಾರ್ಥಿಯೋರ್ವ ಪೊಲೀಸರ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳಿಕ ಆರೋಪಗಳು ಮತ್ತಷ್ಟು ಗಂಭೀರವಾಗಿವೆ. ನ್ಯಾಯ ಕೊಡಿಸಬೇಕಾದವರೇ ಅನ್ಯಾಯದ ದಾರಿಗೆ ಇಳಿದಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ.
ಕ್ರಿಕೆಟ್ ಬೆಟ್ಟಿಂಗ್, ಅಕ್ರಮ ಅಕ್ಕಿ ಸಾಗಾಟ ಸೇರಿದಂತೆ ಹಲವು ಕಾನೂನುಬಾಹಿರ ಚಟುವಟಿಕೆಗಳು ಪೊಲೀಸರ ಮೂಗಿನ ನೇರದಲ್ಲಿ ನಡೆಯುತ್ತಿದ್ದರೂ ಕಠಿಣ ಕ್ರಮ ಕಾಣಿಸುತ್ತಿಲ್ಲ ಎಂಬುದು ಮತ್ತೊಂದು ಆರೋಪ.
ಈ ಹಿನ್ನೆಲೆ, ಎಲ್ಲಾ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳನ್ನು ನೇಮಿಸಬೇಕು ಎಂದು ಶಾಸಕ ಅಬ್ಬಯ್ಯ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ. ಸಿಎಂ ಅವರನ್ನು ಭೇಟಿಯಾಗಿ ಕೂಡಾ ಈ ವಿಷಯ ಪ್ರಸ್ತಾಪಿಸುವುದಾಗಿ ತಿಳಿಸಿದ್ದಾರೆ.



