ಬೆಂಗಳೂರು: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶಗಳ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ತಮಿಳುನಾಡಿನ ಫಲಿತಾಂಶ ಅಚ್ಚರಿ ಮೂಡಿಸಿದೆ ಎಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಈ ಮಟ್ಟದ ರಾಜಕೀಯ ಬದಲಾವಣೆ ಸಂಭವಿಸಬಹುದು ಎಂದು ನಿರೀಕ್ಷಿಸಿರಲಿಲ್ಲ ಎಂದರು.
ತಮಿಳುನಾಡಿನ ಫಲಿತಾಂಶ ನನಗೆ ಆಶ್ಚರ್ಯ ತಂದಿದೆ. ಅಲ್ಲಿ ಹೊಸ ರಾಜಕೀಯ ಯುಗ ಆರಂಭವಾಗಿದೆ. 30ರಿಂದ 40 ಶೇಕಡಾ ಮತಗಳಷ್ಟು ಬದಲಾವಣೆ ಆಗಬಹುದು ಎಂದುಕೊಂಡಿದ್ದೆವು. ಆದರೆ ಈ ಪ್ರಮಾಣದಲ್ಲಿ ಬದಲಾವಣೆ ಆಗುತ್ತದೆ ಎಂದು ಊಹಿಸಿರಲಿಲ್ಲ ಎಂದು ಹೇಳಿದರು.
ಕೇರಳದ ಫಲಿತಾಂಶ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ಗೆ ಗೆಲುವಿನ ವಿಶ್ವಾಸ ಮೊದಲಿನಿಂದಲೂ ಇತ್ತು ಎಂದು ಹೇಳಿದರು. ಅಲ್ಲಿ 10 ವರ್ಷಗಳಿಂದ ಒಂದೇ ಸರ್ಕಾರ ಅಧಿಕಾರದಲ್ಲಿತ್ತು. ಜನರು ಬದಲಾವಣೆ ಬಯಸಿದ್ದರು. ಅದಕ್ಕೆ ಇಂದು ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದರು.
ಅಸ್ಸಾಂ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಪಕ್ಷಕ್ಕೆ ಹೆಚ್ಚಿನ ಸ್ಥಾನಗಳ ನಿರೀಕ್ಷೆ ಇತ್ತು ಎಂದು ಹೇಳಿದರು. ಅಸ್ಸಾಂನಲ್ಲಿ ನಾನು ಪಕ್ಷದ ಜವಾಬ್ದಾರಿ ನಿರ್ವಹಿಸಿದ್ದೆ. ಸ್ಥಳೀಯ ನಾಯಕರು 50ಕ್ಕೂ ಹೆಚ್ಚು ಸ್ಥಾನಗಳ ನಿರೀಕ್ಷೆ ವ್ಯಕ್ತಪಡಿಸಿದ್ದರು. ಆದರೆ ಕ್ಷೇತ್ರ ಮರುವಿಂಗಡಣೆ ಪರಿಣಾಮ ಬೀರಿದೆ ಎಂದು ತಿಳಿಸಿದರು.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿರುವ ಅವರು, “ಅಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲಾಗಿದೆ. ಮತಯಂತ್ರಗಳಲ್ಲೂ ಸಮಸ್ಯೆ ಉಂಟಾಗಿತ್ತು. ಗೆಲ್ಲಲೇಬೇಕು ಎಂಬ ಕಾರಣಕ್ಕೆ ಬಿಜೆಪಿ ಹಲವು ರೀತಿಯ ಪ್ರಯತ್ನಗಳನ್ನು ನಡೆಸಿದೆ,” ಎಂದು ಆರೋಪಿಸಿದರು.

