ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ನಡೆದ ಎರಡೂ ಉಪಚುನಾವಣೆ ಕ್ಷೇತ್ರಗಳಲ್ಲಿ ಬಿಜೆಪಿ ಸೋಲು ಕಂಡಿದ್ದು, ಕಾಂಗ್ರೆಸ್ ತನ್ನ ಹಿಡಿತವನ್ನು ಮತ್ತಷ್ಟು ಬಲಪಡಿಸಿದೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಟಿ. ದಾಸ್ ಕರಿಯಪ್ಪ ವಿರುದ್ಧ 5,708 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಸಮರ್ಥ್ ಶಾಮನೂರು 69,578 ಮತಗಳನ್ನು ಪಡೆದಿದ್ದರೆ, ಶ್ರೀನಿವಾಸ ದಾಸ್ ಕರಿಯಪ್ಪ 63,870 ಮತಗಳನ್ನು ಗಳಿಸಿದ್ದಾರೆ.
ಇನ್ನು ಎಸ್ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ 18,975 ಮತಗಳನ್ನು ಪಡೆದಿದ್ದು, ನೋಟಾಗೆ 511 ಮತಗಳು ಚಲಾವಣೆಯಾಗಿವೆ.
ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಸಿಗದ ಹಿನ್ನೆಲೆ ಕೆಲ ನಾಯಕರು ಅಸಮಾಧಾನಗೊಂಡು ಬಂಡಾಯ ಎದ್ದಿದ್ದರು. ಪರಿಣಾಮವಾಗಿ ಎಸ್ಡಿಪಿಐ ಅಭ್ಯರ್ಥಿ ಸೇರಿದಂತೆ ಒಟ್ಟು 15 ಮಂದಿ ಮುಸ್ಲಿಂ ಅಭ್ಯರ್ಥಿಗಳು ಕಣಕ್ಕಿಳಿದಿದ್ದರು.
ಈ ಎಲ್ಲಾ ಅಭ್ಯರ್ಥಿಗಳಿಗೆ ಒಟ್ಟಾರೆ 22,768 ಮತಗಳು ಲಭಿಸಿವೆ. ಮತ ವಿಭಜನೆಯಿಂದ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿನ ಅಂತರ ಕಡಿಮೆಯಾದರೂ, ಅಂತಿಮವಾಗಿ ಸಮರ್ಥ್ ಶಾಮನೂರು ಗೆಲುವು ಸಾಧಿಸಲು ಸಾಧ್ಯವಾಯಿತು. ಸಮರ್ಥ್ ಶಾಮನೂರು ಅವರ ಗೆಲುವಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ವಿಜಯೋತ್ಸವ ಆಚರಿಸಿದರು.



