ಪಾಟ್ನಾ: ಬಿಹಾರ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದ್ದು, ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್ಡಿಎ ಸರ್ಕಾರ ತನ್ನ ನೂತನ ಸಂಪುಟವನ್ನು ವಿಸ್ತರಿಸಿದೆ. ಒಟ್ಟು 31 ಎನ್ಡಿಎ ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸೈಯದ್ ಅತಾ ಹಸ್ನೈನ್ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಾಕ್ಷಿಯಾಗಿದ್ದು, ಎನ್ಡಿಎ ಮೈತ್ರಿಕೂಟದ ಶಕ್ತಿಪ್ರದರ್ಶನಕ್ಕೆ ವೇದಿಕೆಯಾಯಿತು.
ನೂತನ ಸಂಪುಟದಲ್ಲಿ ಮಾಜಿ ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ಕುಮಾರ್ ಸಚಿವರಾಗಿ ಸೇರ್ಪಡೆಯಾಗಿರುವುದು ರಾಜ್ಯ ರಾಜಕೀಯದಲ್ಲಿ ವಿಶೇಷ ಚರ್ಚೆಗೆ ಕಾರಣವಾಗಿದೆ. ಜೊತೆಗೆ ಬಿಜೆಪಿ, ಜೆಡಿ(ಯು), ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್), ಹಿಂದೂಸ್ತಾನಿ ಅವಾಮ್ ಮೋರ್ಚಾ ಹಾಗೂ ಇತರೆ ಮೈತ್ರಿ ಪಕ್ಷಗಳ ನಾಯಕರಿಗೆ ಅವಕಾಶ ನೀಡಲಾಗಿದೆ.
ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ, ಹಿರಿಯ ನಾಯಕರು ಶ್ರಾವಣ್ ಕುಮಾರ್ ಮತ್ತು ಅಶೋಕ್ ಚೌಧರಿ ಸೇರಿದಂತೆ ಅನುಭವಿಗಳಿಗೂ ಸಂಪುಟದಲ್ಲಿ ಸ್ಥಾನ ಕಲ್ಪಿಸಲಾಗಿದೆ. ಅನುಭವ ಮತ್ತು ಯುವ ನಾಯಕರ ಸಮತೋಲನ ಸಾಧಿಸುವ ಉದ್ದೇಶದಿಂದ ಸಂಪುಟ ರಚನೆ ಮಾಡಲಾಗಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.
ನಿತೀಶ್ ಕುಮಾರ್ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ಅವರ ನೇತೃತ್ವದಲ್ಲಿ ಸಂಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿದ್ದು, ಮುಂಬರುವ ಚುನಾವಣೆಗೆ ಎನ್ಡಿಎ ಒಗ್ಗಟ್ಟಿನ ಸಂದೇಶ ರವಾನಿಸಿದೆ.



