ನವದೆಹಲಿ: ಪೆನ್ನಾರ್ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ನಡುವಿನ ವಿವಾದವನ್ನು ಬಗೆಹರಿಸಲು ಅಂತರರಾಜ್ಯ ಜಲ ನ್ಯಾಯಮಂಡಳಿ ರಚನೆಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಆರು ತಿಂಗಳ ಕಾಲಾವಕಾಶ ನೀಡಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಹಾಗೂ ಸಂದೀಪ್ ಮೆಹ್ತಾ ಅವರ ಪೀಠ, ನ್ಯಾಯಮಂಡಳಿ ರಚನೆಗೆ ಹೆಚ್ಚಿನ ಸಮಯ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿ ಈ ಆದೇಶ ನೀಡಿದೆ.
ಈ ಸಂಬಂಧ ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ವೇಗವಾಗಿ ಕೈಗೊಳ್ಳುತ್ತಿದೆ ಎಂದು ನ್ಯಾಯಪೀಠ ಹೇಳಿದೆ. ಶಾಸನಬದ್ಧ ಹಾಗೂ ಕಾರ್ಯವಿಧಾನ ಸಂಬಂಧಿತ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸಮಂಜಸವಾದ ಸಮಯ ಅಗತ್ಯವಿದೆ. ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಲಾಗುತ್ತಿದ್ದು, ವಿಳಂಬ ಉದ್ದೇಶಪೂರ್ವಕವಾಗಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಪೆನ್ನಾರ್ ಅಥವಾ ಪೆನ್ನೈಯಾರ್ ಅಂತರರಾಜ್ಯ ನದಿ ಕರ್ನಾಟಕದ ಮೇಲ್ಭಾಗದಿಂದ ಹರಿದು ತಮಿಳುನಾಡಿನ ಕೆಳಭಾಗಕ್ಕೆ ಸೇರುತ್ತದೆ. ಈ ನೀರು ಹಂಚಿಕೆ ವಿಚಾರ ಹಲವು ವರ್ಷಗಳಿಂದ ಎರಡೂ ರಾಜ್ಯಗಳ ನಡುವೆ ವಿವಾದಕ್ಕೆ ಕಾರಣವಾಗಿದೆ.
ವಿಚಾರಣೆ ವೇಳೆ ಕರ್ನಾಟಕ ಸರ್ಕಾರದ ಪರ ವಕೀಲ ನಿಶಾಂತ್ ಪಾಟೀಲ್ ಹಾಜರಾಗಿ, ಇದು ವಾಸ್ತವವಾಗಿ ಸಣ್ಣ ಮಟ್ಟದ ವಿವಾದವಾಗಿದ್ದು, ಶೀಘ್ರ ಪರಿಹಾರ ಸಾಧ್ಯ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ತನ್ನ ಅರ್ಜಿಯಲ್ಲಿ, ಜಲಶಕ್ತಿ ಸಚಿವಾಲಯ ಈಗಾಗಲೇ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಲು ಅಗತ್ಯ ಕ್ರಮಗಳನ್ನು ಆರಂಭಿಸಿದೆ ಎಂದು ಮಾಹಿತಿ ನೀಡಿದೆ. ವಿವಿಧ ಸಚಿವಾಲಯಗಳ ನಡುವಿನ ಸಮಾಲೋಚನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರಡು ಸಂಪುಟ ಟಿಪ್ಪಣಿಗೆ ಜಲಶಕ್ತಿ ಸಚಿವರ ಅನುಮೋದನೆಯೂ ದೊರೆತಿದೆ ಎಂದು ತಿಳಿಸಿದೆ.
ಪ್ರಸ್ತುತ ಕರಡು ಸಂಪುಟ ಟಿಪ್ಪಣಿಯನ್ನು ಕೇಂದ್ರ ಸಚಿವ ಸಂಪುಟದ ಪರಿಗಣನೆಗಾಗಿ ಸಂಪುಟ ಸಚಿವಾಲಯಕ್ಕೆ ಕಳುಹಿಸಲಾಗಿದೆ. ಸಚಿವ ಸಂಪುಟ ಅನುಮೋದನೆಯ ಬಳಿಕ, ಅಂತರರಾಜ್ಯ ನದಿ ನೀರು ವಿವಾದ ಕಾಯ್ದೆ 1956ರ ಅನ್ವಯ ನ್ಯಾಯಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಗಾಗಿ ಭಾರತದ ಮುಖ್ಯ ನ್ಯಾಯಾಧೀಶರಿಗೆ ಶಿಫಾರಸು ಕಳುಹಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರು ಸದಸ್ಯರನ್ನು ನಾಮನಿರ್ದೇಶನ ಮಾಡಿದ ಬಳಿಕ, ಕಾನೂನು ವ್ಯವಹಾರಗಳ ಇಲಾಖೆ ಅಧಿಸೂಚನೆ ಸಿದ್ಧಪಡಿಸಿ ಪರಿಶೀಲನೆ ನಡೆಸಲಿದೆ. ಬಳಿಕ ಪೆನ್ನೈಯಾರ್ ವಿವಾದ ನ್ಯಾಯಮಂಡಳಿಯ ಅಧಿಕೃತ ರಚನೆಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.



