ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಐತಿಹಾಸಿಕ ಬದಲಾವಣೆ ಸಂಭವಿಸಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಹಾಗೂ ಎನ್ಡಿಎ ಆಡಳಿತದ 20 ರಾಜ್ಯಗಳ ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿ ಹೊಸ ಸರ್ಕಾರಕ್ಕೆ ಶುಭ ಹಾರೈಸಿದರು.
ಸುವೇಂದು ಅಧಿಕಾರಿ ಅವರೊಂದಿಗೆ ದಿಲೀಪ್ ಘೋಷ್, ಅಗ್ನಿಮಿತ್ರಾ ಪೌಲ್, ಅಶೋಕ್ ಕಿರ್ತನ್ಯ, ಕ್ಷುದಿರಂ ತಡು ಮತ್ತು ನಿಶಿತ್ ಪ್ರಾಮಾಣಿಕ್ ಸಚಿವರಾಗಿ ಪ್ರಮಾಣ ಸ್ವೀಕರಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ತೆರೆದ ವಾಹನ ಮೆರವಣಿಗೆಯ ಮೂಲಕ ವೇದಿಕೆಗೆ ಆಗಮಿಸಿ, ರವೀಂದ್ರನಾಥ ಟ್ಯಾಗೋರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ನಂದಿಗ್ರಾಮ ಚಳವಳಿಯಿಂದ ಹೊರಹೊಮ್ಮಿದ ಸುವೇಂದು ಅಧಿಕಾರಿ, ಮಮತಾ ಬ್ಯಾನರ್ಜಿ ವಿರುದ್ಧದ ರಾಜಕೀಯ ಹೋರಾಟದಿಂದ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದರು. ಇದೀಗ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯೊಂದಿಗೆ ‘ಸೋನಾರ್ ಬಾಂಗ್ಲಾ’ ಕನಸನ್ನು ನನಸಾಗಿಸುವ ಸವಾಲು ಅವರ ಮುಂದಿದೆ.



