ಬೆಂಗಳೂರು: ಕೊತ್ತನೂರು ಸಮೀಪದ ನಾರಾಯಣಪುರದಲ್ಲಿ ನಡೆದ ಭೀಕರ ಅಗ್ನಿ ದುರಂತದಲ್ಲಿ ಇಬ್ಬರು ಪುಟ್ಟ ಮಕ್ಕಳು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ.
ಮಧ್ಯಾಹ್ನ ಸುಮಾರು 1:30ರ ವೇಳೆಗೆ ಶೆಡ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಒಳಗಿದ್ದ ಅರ್ಜುನ್ (5) ಮತ್ತು ಆಶಾ (3) ಎಂಬ ಇಬ್ಬರು ಮಕ್ಕಳು ಸಿಲುಕಿಕೊಂಡಿದ್ದಾರೆ. ಅಗ್ನಿ ಅವಘಡದಲ್ಲಿ ಒಂದು ಮಗು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಂದು ಮಗು ಆಸ್ಪತ್ರೆ ಸಾಗಿಸುವ ಮಾರ್ಗದಲ್ಲಿ ಪ್ರಾಣ ಕಳೆದುಕೊಂಡಿದೆ.
ಮೃತ ಮಕ್ಕಳು ಮೂಲತಃ ರಾಯಚೂರು ಜಿಲ್ಲೆಯವರು ಎಂದು ತಿಳಿದುಬಂದಿದೆ. ಕೂಲಿ ಕೆಲಸಕ್ಕಾಗಿ ತಂದೆ–ತಾಯಿ ಬೆಂಗಳೂರಿಗೆ ಬಂದಿದ್ದು, ಘಟನೆ ಸಮಯದಲ್ಲಿ ಅಜ್ಜಿ ಶೆಡ್ನಿಂದ ಹೊರಗಡೆ ಹೋಗಿದ್ದಾಗ ಈ ದುರಂತ ಸಂಭವಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.
ಘಟನೆ ನಡೆದ ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿ ಕಾಣಿಸಿಕೊಂಡ ನಿಖರ ಕಾರಣವನ್ನು ತಿಳಿಯಲು ತನಿಖೆ ಮುಂದುವರಿಸಿದ್ದಾರೆ.
ಈ ದುರ್ಘಟನೆಯಿಂದ ಸ್ಥಳೀಯರಲ್ಲಿ ಆಘಾತದ ವಾತಾವರಣ ನಿರ್ಮಾಣವಾಗಿದೆ.



