ಬೆಂಗಳೂರು: ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಪರವಾಗಿ ಸಾಕ್ಷ್ಯ ನೀಡದೇ ಪ್ರತಿಕೂಲ ಹೇಳಿಕೆ ನೀಡುವ ಸಂತ್ರಸ್ತರಿಗೆ ಸರ್ಕಾರದ ಸಂತ್ರಸ್ತರ ಪರಿಹಾರ ಯೋಜನೆಯಡಿ ಪರಿಹಾರ ನೀಡಲು ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಅತ್ಯಾಚಾರ ಪ್ರಕರಣವೊಂದರಲ್ಲಿ ಪ್ರತಿಕೂಲ ಸಾಕ್ಷ್ಯ ನೀಡಿದ ಸಂತ್ರಸ್ತೆಗೆ 3 ಲಕ್ಷ ರೂ. ಪರಿಹಾರ ನೀಡುವಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಪೀಠ ಈ ತೀರ್ಪು ಪ್ರಕಟಿಸಿದೆ.
ಪ್ರಕರಣದ ವಿಚಾರಣೆಯಲ್ಲಿ ಸಂತ್ರಸ್ತೆ ನೀಡಿದ ಪ್ರತಿಕೂಲ ಹೇಳಿಕೆಯ ಆಧಾರದ ಮೇಲೆ ಆರೋಪಿ ಖುಲಾಸೆಯಾಗಿದ್ದಾನೆ. ಇಂತಹ ಸಂದರ್ಭದಲ್ಲಿ ಪ್ರಾಸಿಕ್ಯೂಷನ್ಗೆ ಬೆಂಬಲ ನೀಡದೇ ವ್ಯತಿರಿಕ್ತ ಸಾಕ್ಷ್ಯ ನೀಡಿದ ಸಂತ್ರಸ್ತೆಗೆ ಪರಿಹಾರ ನೀಡಲು ವಿಚಾರಣಾ ನ್ಯಾಯಾಧೀಶರಿಗೆ ಅಧಿಕಾರವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು, ಪ್ರಧಾನ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾಗಿರುತ್ತಾರೆ. ಅವರು ಕೇವಲ ಶಿಫಾರಸು ಕಳುಹಿಸುವ ಅಂಚೆ ಕಚೇರಿಯಂತೆ ಕಾರ್ಯನಿರ್ವಹಿಸದೆ, ಎಲ್ಲಾ ಆಯಾಮಗಳನ್ನು ಸಮಗ್ರವಾಗಿ ಪರಿಶೀಲಿಸಿ ಪರಿಹಾರ ಶಿಫಾರಸು ಮಾಡಬೇಕು ಎಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹಲವು ಬಾರಿ ಸುತ್ತೋಲೆಗಳ ಮೂಲಕ ಸೂಚಿಸಿದೆ ಎಂದು ಪೀಠ ಉಲ್ಲೇಖಿಸಿದೆ.
ಆದರೂ, ಈ ಪ್ರಕರಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಸಮರ್ಪಕ ಪರಿಶೀಲನೆ ನಡೆಸದೇ ಪರಿಹಾರ ಶಿಫಾರಸು ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಹೀಗಾಗಿ, ಸಂತ್ರಸ್ತರ ಪರಿಹಾರ ಯೋಜನೆಯ ನಿಯಮಾವಳಿಗಳ ಪ್ರಕಾರ ಈ ಪ್ರಕರಣದ ಸಂತ್ರಸ್ತೆ ಪರಿಹಾರಕ್ಕೆ ಅರ್ಹಳಲ್ಲ ಎಂದು ತಿಳಿಸಿದ ಪೀಠ, ವಿಚಾರಣಾ ನ್ಯಾಯಾಲಯದ ಪರಿಹಾರ ಆದೇಶವನ್ನು ರದ್ದುಪಡಿಸಿದೆ.
ಪ್ರಕರಣದ ಹಿನ್ನೆಲೆ:
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ ಸಂತ್ರಸ್ತೆ ಸಿಆರ್ಪಿಸಿ ಸೆಕ್ಷನ್ 161 ಅಡಿಯಲ್ಲಿ ತನಿಖಾಧಿಕಾರಿಗಳ ಮುಂದೆ ಹಾಗೂ ಸೆಕ್ಷನ್ 164 ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ನೀಡಿದ ಹೇಳಿಕೆಗಳಲ್ಲಿ ಆರೋಪದ ಬಗ್ಗೆ ವಿವರಿಸಿದ್ದರು.
ಆದರೆ ವಿಚಾರಣೆಯ ಸಂದರ್ಭದಲ್ಲಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ಸಾಕ್ಷ್ಯ ನೀಡಿದ್ದರು. ಇದರ ಪರಿಣಾಮವಾಗಿ ವಿಚಾರಣಾ ನ್ಯಾಯಾಲಯ ಆರೋಪಿಯನ್ನು ಖುಲಾಸೆಗೊಳಿಸಿತ್ತು.
ಇದಾದ ಬಳಿಕ, ಈ ಅಂಶವನ್ನು ಪರಿಗಣಿಸದೇ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಸಂತ್ರಸ್ತೆಗೆ 3 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಶಿಫಾರಸು ಮಾಡಿದ್ದರು.
ಈ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹೈಕೋರ್ಟ್ ಮೊರೆ ಹೋಗಿತ್ತು. ಇದೀಗ ಹೈಕೋರ್ಟ್ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿ ಮಹತ್ವದ ಸ್ಪಷ್ಟನೆ ನೀಡಿದೆ.



