ಗದಗ : ಬೇಸಿಗೆಯಿಂದಾಗಿ ಊರಿನ ಕೆರೆ ಬತ್ತಿ ಹೋಗಿದ್ದರಿಂದ ಬಟ್ಟೆ ತೊಳೆಯಲು ಕೃಷಿಹೊಂಡಕ್ಕೆ ತೆರಳಿದ್ದ ಇಬ್ಬರು ಬಾಲಕಿಯರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಗದಗ ತಾಲೂಕಿನ ತಿಮ್ಮಾಪೂರ ಗ್ರಾಮದ ಬಳಿ ನಡೆದಿದೆ.
ಮೃತರನ್ನು ತಿಮ್ಮಾಪೂರ ಗ್ರಾಮದ ಲಕ್ಷ್ಮವ್ವ ಹರಣಶಿಕಾರಿ (15) ಹಾಗೂ ಮುತ್ತವ್ವ ಹರಣಶಿಕಾರಿ (8) ಎಂದು ಗುರುತಿಸಲಾಗಿದೆ.
ತಿಮ್ಮಾಪೂರ – ಯರೇಹಂಚಿನಾಳ ರಸ್ತೆಯ ಸಮೀಪ, ಕೊಪ್ಪಳ ಜಿಲ್ಲೆಯ ಯರೆಹಂಚಿನಾಳ ಗ್ರಾಮದ ಸರಹದ್ದಿನ ಜಮೀನಿನಲ್ಲಿ ನಿರ್ಮಿಸಲಾಗಿದ್ದ ಕೃಷಿಹೊಂಡದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಗ್ರಾಮದ ಕೆರೆ ಸಂಪೂರ್ಣ ಬತ್ತಿ ಹೋಗಿರುವುದರಿಂದ ನೀರಿಗಾಗಿ ಗ್ರಾಮಸ್ಥರು ಪರದಾಡುತ್ತಿದ್ದರು. ಇದೇ ಕಾರಣಕ್ಕೆ ಮಂಗಳವಾರ ಮಧ್ಯಾಹ್ನ ಇಬ್ಬರು ಬಾಲಕಿಯರು ಕೃಷಿಹೊಂಡಕ್ಕೆ ಬಟ್ಟೆ ತೊಳೆಯಲು ತೆರಳಿದ್ದರು. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದು, ಈಜಲು ಬಾರದೆ ಇಬ್ಬರೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಘಟನೆ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಕೃಷಿಹೊಂಡದಿಂದ ಇಬ್ಬರ ಮೃತದೇಹಗಳನ್ನು ಹೊರತೆಗೆದರು. ಇಬ್ಬರು ಹೆಣ್ಣುಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.
ಘಟನಾ ಸ್ಥಳಕ್ಕೆ ಕುಕನೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮದಲ್ಲಿ ತೀವ್ರ ನೀರಿನ ಸಮಸ್ಯೆ ಇರುವುದರಿಂದ ಜನರು ಕೃಷಿಹೊಂಡಗಳನ್ನೇ ಅವಲಂಬಿಸಿರುವುದು ಈ ದುರಂತಕ್ಕೆ ಕಾರಣವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.



