ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಿಷೇಧಿತ `ಜಮಾತ್-ಎ-ಇಸ್ಲಾಮಿ’ ಸಂಘಟನೆಯನ್ನು ಪುನಶ್ಚೇತನಗೊಳಿಸಲು ಯತ್ನ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮಧ್ಯ ಹಾಗೂ ದಕ್ಷಿಣ ಕಾಶ್ಮೀರದ ಹಲವು ಪ್ರದೇಶಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ.
ಮೂಲಗಳ ಮಾಹಿತಿ ಪ್ರಕಾರ, ಶ್ರೀನಗರದ ಲಾಲ್ ಬಜಾರ್ ಹಾಗೂ ದಕ್ಷಿಣ ಕಾಶ್ಮೀರದ ಶೋಪಿಯಾನ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಎನ್ಐಎ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ದಾಳಿಯ ವೇಳೆ ಕೆಲವು ಸ್ಥಳಗಳಲ್ಲಿ ದಾಖಲೆಗಳು ಹಾಗೂ ಇತರೆ ಮಾಹಿತಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
1941ರಲ್ಲಿ ಸ್ಥಾಪನೆಯಾದ `ಜಮಾತ್-ಎ-ಇಸ್ಲಾಮಿ’ ಸಂಘಟನೆಯ ವಿರುದ್ಧ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸುವುದು, ಭಾರತ ವಿರೋಧಿ ಪ್ರಚಾರ ನಡೆಸುವುದು ಹಾಗೂ ಭಯೋತ್ಪಾದಕ ಚಟುವಟಿಕೆಗಳಿಗೆ ಪರೋಕ್ಷ ಬೆಂಬಲ ನೀಡಿರುವ ಗಂಭೀರ ಆರೋಪಗಳು ಕೇಳಿಬಂದಿವೆ.
ಈ ಹಿನ್ನೆಲೆದಲ್ಲಿ ಕೇಂದ್ರ ಸರ್ಕಾರವು 2024ರ ಫೆಬ್ರವರಿಯಲ್ಲಿ ಜಮಾತ್-ಎ-ಇಸ್ಲಾಮಿ ಜಮ್ಮು ಕಾಶ್ಮೀರ’ ಸಂಘಟನೆಯನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) 1967ರ ಸೆಕ್ಷನ್ 3(1) ಅಡಿಯಲ್ಲಿ ಮತ್ತಷ್ಟು ಐದು ವರ್ಷಗಳ ಕಾಲ ಕಾನೂನುಬಾಹಿರ ಸಂಘಟನೆ’ ಎಂದು ಘೋಷಿಸಿ ನಿಷೇಧಾವಧಿಯನ್ನು ವಿಸ್ತರಿಸಿತ್ತು.



