ಕಾರವಾರ: ಕಪ್ಪೆಚಿಪ್ಪು ತೆಗೆಯಲು ತೆರಳಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ಸಾವನ್ನಪ್ಪಿದ 11 ಮಂದಿಯ ಸಾಮೂಹಿಕ ಅಂತ್ಯಸಂಸ್ಕಾರವು ಇಂದು ಭಟ್ಕಳದ ಶಾರದಾಹೊಳೆಯಲ್ಲಿ ಶೋಕಾ ವಾತಾವರಣದಲ್ಲಿ ನೆರವೇರಿತು.
ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಪ್ರದೇಶವೇ ಶೋಕ ಸಾಗರದಲ್ಲಿ ಮುಳುಗಿತ್ತು. ಸಾವಿರಾರು ಮಂದಿ ಅಂತಿಮ ದರ್ಶನ ಪಡೆದು ಮೃತರಿಗೆ ಕಣ್ಣೀರಿನ ವಿದಾಯ ಸಲ್ಲಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಸ್ಥಳಕ್ಕೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ಭಟ್ಕಳದ ಇತಿಹಾಸದಲ್ಲೇ ಇಂತಹ ದುರ್ಘಟನೆ ನಡೆದಿರಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಪ್ರತಿ ವರ್ಷ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಕಪ್ಪೆಚಿಪ್ಪು ತೆಗೆಯುವ ಕಾರ್ಯ ಸಾಮಾನ್ಯವಾಗಿದ್ದರೂ, ಈ ಬಾರಿ ಸಂಭವಿಸಿದ ದುರಂತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಗೆ ಕಾರಣ ಏನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಮೃತರ ಕುಟುಂಬಗಳಿಗೆ ಸರ್ಕಾರದ ನೆರವು ನಿರಂತರವಾಗಿ ಇರಲಿದೆ. ಚಿಕಿತ್ಸೆ ಪಡೆಯುತ್ತಿರುವವರ ವೈದ್ಯಕೀಯ ವೆಚ್ಚವನ್ನು ವೈಯಕ್ತಿಕವಾಗಿ ಭರಿಸುವುದಾಗಿ ತಿಳಿಸಿದ ಮಂಕಾಳು ವೈದ್ಯ, ಮೃತರ ಮಕ್ಕಳ ಶಿಕ್ಷಣಕ್ಕೂ ಅಗತ್ಯ ಸಹಾಯ ನೀಡಲು ಸಿದ್ಧವಿದ್ದೇನೆ ಎಂದು ಭರವಸೆ ನೀಡಿದರು.



