ಹಾವೇರಿ: ಸಂಬಂಧಗಳೇ ರಕ್ತಪಾತಕ್ಕೆ ಕಾರಣವಾಗುತ್ತಿರುವ ಘಟನೆಗಳು ರಾಜ್ಯದಲ್ಲಿ ಮರುಕಳಿಸುತ್ತಿರುವ ಬೆನ್ನಲ್ಲೇ, ಶಿಗ್ಗಾವಿಯಲ್ಲಿ ನಡೆದ ದಾರುಣ ಕೊಲೆ ಪ್ರಕರಣ ಸಂಚಲನ ಮೂಡಿಸಿದೆ. ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದ ಮೇಲೆ ತಮ್ಮನೇ ಸ್ವಂತ ಅಕ್ಕನ ಕತ್ತು ಸೀಳಿ ಕೊಲೆಗೈದಿರುವ ಆರೋಪ ಕೇಳಿಬಂದಿದೆ.
ಮೃತ ಮಹಿಳೆಯನ್ನು ಸುಮಾ ಶಿವಶಂಕರ್ ವನಹಳ್ಳಿ (29) ಎಂದು ಗುರುತಿಸಲಾಗಿದ್ದು, ಆಕೆ ಶಿಗ್ಗಾವಿಯ ಮೌಲಾಲಿ ಗುಡ್ಡ ಪ್ರದೇಶದ ಅಂಗನವಾಡಿ ಕೇಂದ್ರದಲ್ಲಿ ಆಯಾ ಕೆಲಸ ಮಾಡುತ್ತಿದ್ದಳು. ಸೋಮವಾರ ಬೆಳಗ್ಗೆ ಸುಮಾರು 10:15ರ ವೇಳೆಗೆ ಅಂಗನವಾಡಿಗೆ ಬಂದ ಆರೋಪಿ ಸಂಜು, ಅಕ್ಕನೊಂದಿಗೆ ವಾಗ್ವಾದ ಆರಂಭಿಸಿದ್ದಾನೆ.
ಕೆಲವೇ ಕ್ಷಣಗಳಲ್ಲಿ ಪರಿಸ್ಥಿತಿ ಹಿಂಸಾತ್ಮಕ ತಿರುವು ಪಡೆದುಕೊಂಡಿದ್ದು, ಸಂಜು ತನ್ನ ಬಳಿ ಇದ್ದ ಮಚ್ಚಿನಿಂದ ಸುಮಾಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಕುತ್ತಿಗೆ ಭಾಗಕ್ಕೆ ಬಿದ್ದ ಗಂಭೀರ ಏಟು ಹಾಗೂ ಕೈಗೆ ಉಂಟಾದ ಭಾರೀ ಗಾಯದಿಂದ ಸುಮಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನಾ ಸ್ಥಳದಲ್ಲಿ ರಕ್ತದ ಮಡುವು ಸೃಷ್ಟಿಯಾಗಿದ್ದು, ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಶಿಗ್ಗಾವಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಅಕ್ರಮ ಸಂಬಂಧದ ಅನುಮಾನವೇ ಕೊಲೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ. ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಬಂಧನ ಕಾರ್ಯಾಚರಣೆ ಮುಂದುವರಿದಿದೆ.



