ಬೆಂಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಒಬ್ಬ ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಕೆಳಗೆ ಹಾರಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ.
ಗಾಯಗೊಂಡ ಆರೋಪಿಯನ್ನು ನಗರದ ಕುಖ್ಯಾತ ರೌಡಿಶೀಟರ್ ನಾಗರಾಜ್ ಅಲಿಯಾಸ್ ‘ಸ್ಪಾಟ್ ನಾಗ’ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಈ ಹಿಂದೆಯೇ ಹಲವು ಪ್ರಕರಣಗಳು ದಾಖಲಾಗಿದ್ದು, ಯುವಕನೊಬ್ಬನಿಗೆ ಚಾಕು ಇರಿದು ಕೊಲೆ ಯತ್ನ ನಡೆಸಿದ ಪ್ರಕರಣದಲ್ಲೂ ಪೊಲೀಸರಿಗೆ ಬೇಕಾಗಿದ್ದ ಆರೋಪಿ ಎನ್ನಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದ ಸ್ಪಾಟ್ ನಾಗ ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ರಹಸ್ಯವಾಗಿ ಹೊಸ ಮನೆ ನಿರ್ಮಾಣ ಮಾಡಿಸುತ್ತಿದ್ದ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಸೋಲದೇವನಹಳ್ಳಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಲು ದಾಳಿ ನಡೆಸಿದ್ದಾರೆ.
ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಅಲರ್ಟ್ ಆದ ಸ್ಪಾಟ್ ನಾಗ, ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ತನ್ನನ್ನು ಹಿಡಿಯಲು ಬಂದ ಪೊಲೀಸರನ್ನು ತಳ್ಳಿ ಹಾಕಿ, ಅವರ ಮೇಲೆಯೇ ದಾಳಿ ನಡೆಸಲು ಮುಂದಾಗಿದ್ದಾನೆ ಎಂದು ತಿಳಿದುಬಂದಿದೆ. ಬಳಿಕ ಅಲ್ಲಿಂದ ಎಸ್ಕೇಪ್ ಆಗುವ ಆತುರದಲ್ಲಿ ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಕೆಳಗೆ ಜಿಗಿದಿದ್ದಾನೆ.
ಆದರೆ ಕಟ್ಟಡದಿಂದ ಕೆಳಗೆ ಬಿದ್ದ ರಭಸಕ್ಕೆ ಸ್ಪಾಟ್ ನಾಗ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಪೊಲೀಸರು ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಆತನ ಸೊಂಟದ ಮೂಳೆ ಜಾಯಿಂಟ್ ಕಂಪ್ರೆಷನ್ ಆಗಿರುವುದು ದೃಢಪಟ್ಟಿದೆ.
ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸ್ಪಾಟ್ ನಾಗ ವಿರುದ್ಧ ಕರ್ತವ್ಯ ನಿರತ ಪೊಲೀಸರಿಗೆ ಅಡ್ಡಿಪಡಿಸಿದ, ಜೀವ ಬೆದರಿಕೆ ಹಾಕಿದ ಹಾಗೂ ಹಲ್ಲೆಗೆ ಯತ್ನಿಸಿದ ಆರೋಪದಡಿ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.



