ಭಾರತೀಯ ಚಿತ್ರರಂಗದ ಪ್ರಮುಖ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾದ ‘ಹೊಂಬಾಳೆ ಫಿಲ್ಮ್ಸ್’ ಈಗ ಮ್ಯೂಸಿಕ್ ಕ್ಷೇತ್ರಕ್ಕೂ ಅಧಿಕೃತವಾಗಿ ಕಾಲಿಟ್ಟಿದೆ. ‘ಹೊಂಬಾಳೆ ಮ್ಯೂಸಿಕ್’ ಮೂಲಕ ಸಿನಿಮಾಗಳ ಆಡಿಯೋ ಹಕ್ಕುಗಳನ್ನು ಖರೀದಿಸುವ ಕಾರ್ಯ ಆರಂಭಿಸಿರುವ ಸಂಸ್ಥೆ, ತನ್ನ ಮೊದಲ ಖರೀದಿಯಾಗಿ ‘ದೇವಿ ಮಹಾತ್ಮೆ’ ಸಿನಿಮಾದ ಆಡಿಯೋ ಹಕ್ಕುಗಳನ್ನು ಪಡೆದುಕೊಂಡಿದೆ.
‘ಕೆಜಿಎಫ್’, ‘ಕಾಂತಾರ’, ‘ಸಲಾರ್’ ಸೇರಿದಂತೆ ಬಿಗ್ ಬಜೆಟ್ ಚಿತ್ರಗಳನ್ನು ನಿರ್ಮಿಸಿ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿರುವ ಹೊಂಬಾಳೆ, ಈಗ ಸಂಗೀತ ಮಾರುಕಟ್ಟೆಯಲ್ಲೂ ತನ್ನ ಹಾಜರಾತಿಯನ್ನು ಗಟ್ಟಿಗೊಳಿಸುತ್ತಿದೆ. ‘ದೇವಿ ಮಹಾತ್ಮೆ’ ಚಿತ್ರದ ಆಡಿಯೋ ಹಕ್ಕು ಹೊಂಬಾಳೆ ಮ್ಯೂಸಿಕ್ಗೆ ಸೇರುವುದರಿಂದ ಚಿತ್ರತಂಡಕ್ಕೆ ದೊಡ್ಡ ಮಟ್ಟದ ಬಲ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.
ನಾಗರಾಜ ಸೋಮಯಾಜಿ ನಿರ್ದೇಶನದ ಈ ಚಿತ್ರವು ಕಾಮಿಡಿ ಥ್ರಿಲ್ಲರ್ ಕಥಾಹಂದರ ಹೊಂದಿದ್ದು, ಲಿಖಿತ್ ಪ್ರಸಾದ್ ಕೆ. ಶೆಟ್ಟಿ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಯುವಿಜಿ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ವಿದ್ಯಾ ಗಾಂಧಿರಾಜನ್ ಅವರು ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಚಿತ್ರದ ತಾಂತ್ರಿಕ ವಿಭಾಗದಲ್ಲೂ ಬಲವಾದ ತಂಡ ಕೆಲಸ ಮಾಡುತ್ತಿದ್ದು, ಉಜ್ವಲ್ ಚಂದ್ರ ಅವರ ಸಂಕಲನ ಮತ್ತು ಎಸ್.ಕೆ. ರಾವ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಬರವಣಿಗೆಯಲ್ಲಿ ಅರವಿಂದ್ ಕುಪ್ಳೀಕರ್ ಸೇರಿದಂತೆ ಹಲವು ಲೇಖಕರು ಕೈಜೋಡಿಸಿದ್ದಾರೆ.



