ನವದೆಹಲಿ: ದೇಶಾದ್ಯಂತ ಮುಸ್ಲಿಂ ಸಮುದಾಯದಲ್ಲಿ ಈದ್ ಉಲ್-ಅಧಾ (ಬಕ್ರೀದ್) ಹಬ್ಬದ ಸಂಭ್ರಮ ಮನೆ ಮಾಡಿದೆ. ಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಅನೇಕ ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಸಹೋದರತ್ವ, ತ್ಯಾಗ ಮತ್ತು ಮಾನವೀಯತೆ ಸೇವೆಯ ಸಂದೇಶವನ್ನು ಈ ಹಬ್ಬ ಸಾರುತ್ತದೆ ಎಂದು ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಶುಭಾಶಯ ಸಂದೇಶ ಹಂಚಿಕೊಂಡಿದ್ದಾರೆ. “ಈದ್ ಉಲ್-ಅಧಾ ಶುಭಾಶಯಗಳು. ಈ ಪವಿತ್ರ ಹಬ್ಬವು ಸಮಾಜದಲ್ಲಿ ಸಂತೋಷ, ಸಹೋದರತ್ವ ಮತ್ತು ಏಕತೆಯ ಮನೋಭಾವವನ್ನು ಮತ್ತಷ್ಟು ಬಲಪಡಿಸಲಿ. ಎಲ್ಲರಿಗೂ ಉತ್ತಮ ಆರೋಗ್ಯ ಮತ್ತು ಯಶಸ್ಸು ದೊರಕಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಅವರು ಬರೆದಿದ್ದಾರೆ.
ಇದೇ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. “ಈದ್ ಅಲ್-ಅಧಾ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ, ವಿಶೇಷವಾಗಿ ಮುಸ್ಲಿಂ ಸಹೋದರ-ಸಹೋದರಿಯರಿಗೆ ಹೃತ್ಪೂರ್ವಕ ಅಭಿನಂದನೆಗಳು. ಈ ಹಬ್ಬವು ತ್ಯಾಗ, ಭಕ್ತಿ ಮತ್ತು ಸ್ವಯಂ ಸಮರ್ಪಣೆಯ ಸಂಕೇತವಾಗಿದೆ. ಮಾನವೀಯತೆ ಮತ್ತು ವಂಚಿತ ವರ್ಗಗಳ ಸೇವೆಗೆ ಇದು ನಮಗೆ ಸ್ಫೂರ್ತಿ ನೀಡುತ್ತದೆ” ಎಂದು ರಾಷ್ಟ್ರಪತಿ ತಿಳಿಸಿದ್ದಾರೆ.
ಬಕ್ರೀದ್ ಹಬ್ಬದ ಅಂಗವಾಗಿ ದೇಶದ ವಿವಿಧ ಭಾಗಗಳಲ್ಲಿ ವಿಶೇಷ ಪ್ರಾರ್ಥನೆಗಳು, ಧಾರ್ಮಿಕ ವಿಧಿವಿಧಾನಗಳು ಹಾಗೂ ಸಾಮಾಜಿಕ ಸೇವಾ ಕಾರ್ಯಕ್ರಮಗಳು ನಡೆಯುತ್ತಿವೆ. ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.



