ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದಾಗಿ ಘೋಷಿಸಿರುವ ಬೆನ್ನಲ್ಲೇ ಆಡಳಿತ ವಲಯದಲ್ಲಿ ಮಹತ್ವದ ಅಧಿಕಾರಿಗಳ ವರ್ಗಾವಣೆ ನಡೆದಿದೆ. ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸುವ ಸಾಧ್ಯತೆ ನಡುವೆಯೇ ಸಿದ್ದರಾಮಯ್ಯ ಅವರ ಆಪ್ತ ಅಧಿಕಾರಿಗಳನ್ನು ವಿವಿಧ ಇಲಾಖೆಗಳಿಗೆ ವರ್ಗಾವಣೆ ಮಾಡಲಾಗಿದೆ.
ಸಿಎಂ ಆಪ್ತ ಕಾರ್ಯದರ್ಶಿಯಾಗಿದ್ದ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ಕೃಷಿ ಮಾರಾಟ ಇಲಾಖೆಯ ನಿರ್ದೇಶಕರಾಗಿ ನಿಯೋಜಿಸಲಾಗಿದೆ. ಸಿಎಂ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ರಮೇಶ್ ಪಿ. ಕೋನರೆಡ್ಡಿ ಅವರನ್ನು ವಿದ್ಯುತ್ ಪ್ರಸರಣ ನಿಗಮದ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
ಇದೇ ವೇಳೆ ಸಿಎಂ ಜಂಟಿ ಕಾರ್ಯದರ್ಶಿಯಾಗಿದ್ದ ಟಿ.ಎನ್. ಕೃಷ್ಣಮೂರ್ತಿ ಅವರನ್ನು ನಗರಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿ-2 ಹುದ್ದೆಗೆ ನೇಮಿಸಲಾಗಿದೆ. ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಬಿ. ಶಿವಸ್ವಾಮಿ ಅವರನ್ನು ಕ್ರೈಸ್ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
2023ರಲ್ಲಿ ಸಿದ್ದರಾಮಯ್ಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ತಮ್ಮ ಆಡಳಿತ ತಂಡವನ್ನು ಬಲಪಡಿಸುವ ಉದ್ದೇಶದಿಂದ ಆಪ್ತ ಅಧಿಕಾರಿಗಳನ್ನು ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಿದ್ದರು. ಆ ಸಂದರ್ಭದಲ್ಲಿ ಡಾ. ವೆಂಕಟೇಶಯ್ಯ ಅವರನ್ನು ಗುತ್ತಿಗೆ ಆಧಾರದ ಮೇಲೆ ಸಿಎಂ ಆಪ್ತ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಜೊತೆಗೆ ಹಿರಿಯ ಕೆಎಎಸ್ ಅಧಿಕಾರಿ ರಮೇಶ್ ಪಿ. ಕೋನರೆಡ್ಡಿ ಅವರಿಗೆ ಸಿಎಂ ವಿಶೇಷ ಕರ್ತವ್ಯಾಧಿಕಾರಿ ಜವಾಬ್ದಾರಿ ನೀಡಲಾಗಿತ್ತು.
ಸಾಮಾನ್ಯವಾಗಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರಮುಖ ಆಡಳಿತಾತ್ಮಕ ಬದಲಾವಣೆಗಳು ನಡೆಯುವುದು ರೂಢಿಯಾಗಿದೆ. ಆದರೆ, ಸಿದ್ದರಾಮಯ್ಯ ರಾಜೀನಾಮೆ ನೀಡುವ ಮುನ್ನವೇ ಅವರ ಆಪ್ತ ಅಧಿಕಾರಿಗಳ ವರ್ಗಾವಣೆ ನಡೆದಿರುವುದು ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.



