ಗದಗ: ಗದಗ-ಬೆಟಗೇರಿ ಭಾಗದಲ್ಲಿ ಹಲವಾರು ವರ್ಷಗಳಿಂದ ಗಾಂಜಾ ಮಾರಾಟ ಜಾಲ ಹಬ್ಬಿಸಿ ಯುವಕರನ್ನು ಮಾದಕ ವ್ಯಸನದತ್ತ ತಳ್ಳುತ್ತಿದ್ದಾನೆ ಎನ್ನಲಾದ ಕುಖ್ಯಾತ ಆರೋಪಿಯ ವಿರುದ್ಧ ಇದೀಗ ಪೊಲೀಸ್ ಇಲಾಖೆ ಕಠಿಣ ಹೆಜ್ಜೆ ಇಟ್ಟಿದೆ. ಬೆಟಗೇರಿ ಗಣೇಶನಗರ ನಿವಾಸಿ ಮಾರುತಿ @ ಮಾರಯ್ಯ ಶೇಖಪ್ಪ ಕಾಳೆ @ ಹರಣಶಿಕಾರಿ ವಿರುದ್ಧ PIT NDPS ಕಾಯ್ದೆಯಡಿ ಕ್ರಮ ಕೈಗೊಳ್ಳಲು ಬೆಟಗೇರಿ ಪೊಲೀಸರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಪೊಲೀಸ್ ದಾಖಲೆಗಳ ಪ್ರಕಾರ, ಮಾರುತಿ ಕಾಳೆ ಹಲವು ವರ್ಷಗಳಿಂದ ಗಾಂಜಾ ಸಾಗಾಟ ಮತ್ತು ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದಾನೆ. ಯುವಕರು, ಬಡವರು ಮತ್ತು ಸಾಮಾನ್ಯ ಜನರನ್ನು ಗುರಿಯಾಗಿಸಿಕೊಂಡು ಅಕ್ರಮ ಮಾದಕ ವಸ್ತುಗಳ ಜಾಲ ಹಬ್ಬಿಸಿದ್ದಾನೆ ಎಂಬ ಗಂಭೀರ ಆರೋಪ ಈತನ ಮೇಲಿದೆ. ಈತನ ವಿರುದ್ಧ ಈಗಾಗಲೇ ಬೆಟಗೇರಿ ಹಾಗೂ ಗದಗ ಗ್ರಾಮೀಣ ಪೊಲೀಸ್ ಠಾಣೆಗಳಲ್ಲಿ ಆರು ಪ್ರತ್ಯೇಕ ಎನ್ಡಿಪಿಎಸ್ ಪ್ರಕರಣಗಳು ದಾಖಲಾಗಿವೆ.
2017ರಲ್ಲಿ ಮೊದಲ ಬಾರಿಗೆ 160 ಗ್ರಾಂ ಗಾಂಜಾ ಜಪ್ತಿ ಪ್ರಕರಣ ದಾಖಲಾಗಿದ್ದರೆ, ಬಳಿಕ 2019, 2021, 2023, 2025 ಹಾಗೂ 2026ರಲ್ಲೂ ಗಾಂಜಾ ಮಾರಾಟ ಮತ್ತು ಸಾಗಾಟ ಪ್ರಕರಣಗಳಲ್ಲಿ ಈತನ ಹೆಸರು ಕೇಳಿಬಂದಿದೆ. ಇತ್ತೀಚಿನ ಪ್ರಕರಣದಲ್ಲಿ 1051 ಗ್ರಾಂ ಹಾಗೂ 52 ಗ್ರಾಂ ಗಾಂಜಾ ಜಪ್ತಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಹೇಳುವಂತೆ, ಮಾರುತಿ ಕಾಳೆ ವಿರುದ್ಧ ರೌಡಿ ಶೀಟ್ ತೆರೆಯಲಾಗಿದ್ದರೂ ಆತ ತನ್ನ ಅಕ್ರಮ ಚಟುವಟಿಕೆ ನಿಲ್ಲಿಸಿರಲಿಲ್ಲ. ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ನಿರಂತರವಾಗಿ ಗಾಂಜಾ ಮಾರಾಟ ನಡೆಸುತ್ತಿದ್ದ ಹಿನ್ನೆಲೆ ಸಾಮಾನ್ಯ ಕಾನೂನು ಕ್ರಮಗಳು ಪರಿಣಾಮಕಾರಿಯಾಗುತ್ತಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಈ ಹಿನ್ನೆಲೆಯಲ್ಲಿ “Prevention of Illicit Traffic in Narcotic Drugs and Psychotropic Substances Act-1988 (PIT NDPS)” ಅಡಿಯಲ್ಲಿ ಕಠಿಣ ಕ್ರಮ ಜರುಗಿಸಲು ಪೊಲೀಸ್ ಇಲಾಖೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಗದಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರೋಹನ್ ಜಗದೀಶ್ ಅವರ ಮಾರ್ಗದರ್ಶನದಲ್ಲಿ ಈ ಪ್ರಸ್ತಾವನೆ ಸಿದ್ಧಪಡಿಸಲಾಗಿದ್ದು, ಗದಗ ಉಪವಿಭಾಗದ ಡಿವೈಎಸ್ಪಿ ಮುರ್ತುಜಾ ಖಾದ್ರಿ, ಸಿಪಿಐ ಸಿಂಧೆ, ಪಿಎಸ್ಐ ಆರಿ ಹಾಗೂ ಸಿಬ್ಬಂದಿ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ.



