ಮೈಸೂರು: ರಾಜ್ಯದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮಹತ್ವದ ಸಂದೇಶ ರವಾನಿಸಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದವರು ಈಗ ಅಧಿಕಾರ ತ್ಯಾಗದ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳುವ ಮೂಲಕ ಹೊಸ ಮುಖಗಳಿಗೆ ಅವಕಾಶ ನೀಡುವಂತೆ ಪರೋಕ್ಷವಾಗಿ ಒತ್ತಾಯಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಹೊಸಬರಿಗೆ ಸಚಿವ ಸ್ಥಾನ ಸಿಗುವ ವಾತಾವರಣ ನಿರ್ಮಾಣವಾಗಬೇಕು. ಪಕ್ಷದಲ್ಲಿ ಹಲವು ನಾಯಕರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಹೀಗಾಗಿ ಹೊಸ ತಲೆಮಾರಿಗೆ ಅವಕಾಶ ನೀಡುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.
ತಮ್ಮ ಸಚಿವ ಸ್ಥಾನದ ಸಾಧ್ಯತೆ ಕುರಿತೂ ಮಾತನಾಡಿದ ತನ್ವೀರ್ ಸೇಠ್, ಕಳೆದ ಬಾರಿ ತಮಗೆ ಸಚಿವ ಸ್ಥಾನ ಸಿಗಬೇಕಿತ್ತು. ಆದರೆ ಕೆಲವು ಕಾರಣಗಳಿಂದ ಅದು ಸಾಧ್ಯವಾಗಿರಲಿಲ್ಲ. ಈ ಬಾರಿ ಪಕ್ಷದ ವರಿಷ್ಠರು ತಮ್ಮನ್ನು ಪರಿಗಣಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಇದೇ ವೇಳೆ ತಾವು ಯಾವತ್ತೂ ಸಿದ್ದರಾಮಯ್ಯ ವಿರೋಧಿ ಬಣದಲ್ಲಿ ಇರಲಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಯಾರ ವಿರುದ್ಧವೂ ರಾಜಕೀಯವಾಗಿ ನಿಂತಿಲ್ಲ. ಕೆಲವು ಸಂದರ್ಭಗಳಲ್ಲಿ ಅವಕಾಶ ಕೈ ತಪ್ಪಿತ್ತು ಅಷ್ಟೇ ಎಂದು ಹೇಳಿದರು.



