ಹುಬ್ಬಳ್ಳಿ: ಅವಳಿ ನಗರಗಳ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ವೇದಿಕೆ ಸಿದ್ಧವಾಗಿದೆ. ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ, ಹುಬ್ಬಳ್ಳಿ-ಧಾರವಾಡ ಬೃಹತ್ ಮಹಾನಗರ ಪಾಲಿಕೆ ರಚನೆಗೆ ಸಂಬಂಧಿಸಿದ ಹಿಂದಿನ ನಿರ್ಣಯ ಅಮಾನ್ಯವಾಗಿದೆ.
ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯ ಬಳಿಕ ಮಾಹಿತಿ ನೀಡಿದ ಮೇಯರ್ ಜ್ಯೋತಿ ಪಾಟೀಲ್, ರಾಜ್ಯಪಾಲರ ಅಂಕಿತದೊಂದಿಗೆ ಪ್ರತ್ಯೇಕ ಪಾಲಿಕೆ ರಚನೆಗೆ ಕಾನೂನುಬದ್ಧ ಮಾನ್ಯತೆ ದೊರೆತಿದೆ. ಇದರಿಂದ ಬೃಹತ್ ಮಹಾನಗರ ಪಾಲಿಕೆ ರಚನೆಗೆ ಕೈಗೊಳ್ಳಲಾಗಿದ್ದ ಠರಾವು ಮುಂದುವರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
16ನೇ ಹಣಕಾಸು ಆಯೋಗದ ಮಾನದಂಡಗಳ ಪ್ರಕಾರ ಹೆಚ್ಚಿನ ಜನಸಂಖ್ಯೆ ಹೊಂದಿರುವ ನಗರಗಳಿಗೆ ಹೆಚ್ಚುವರಿ ಅನುದಾನ ಪಡೆಯುವ ಉದ್ದೇಶದಿಂದ ಅವಳಿ ನಗರಗಳನ್ನು ಬೃಹತ್ ಮಹಾನಗರ ಪಾಲಿಕೆಯಾಗಿ ಪರಿವರ್ತಿಸುವ ಪ್ರಸ್ತಾಪ ಮುಂದಿಡಲಾಗಿತ್ತು. ಆದರೆ ಧಾರವಾಡವನ್ನು ಪ್ರತ್ಯೇಕ ಪಾಲಿಕೆಯಾಗಿಸಬೇಕೆಂಬ ಬೇಡಿಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಸ್ವರೂಪ ಪಡೆದಿತ್ತು.
ಈಗ ರಾಜ್ಯಪಾಲರ ಸಹಿಯೊಂದಿಗೆ ಧಾರವಾಡ ಪ್ರತ್ಯೇಕ ಪಾಲಿಕೆ ರಚನೆಗೆ ಅಂತಿಮ ಮುದ್ರೆ ಬಿದ್ದಿದ್ದು, ದೀರ್ಘಕಾಲದ ಹೋರಾಟಕ್ಕೆ ಯಶಸ್ಸು ದೊರೆತಂತಾಗಿದೆ. ಮುಂದಿನ ದಿನಗಳಲ್ಲಿ ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಪ್ರತ್ಯೇಕ ಆಡಳಿತ ವ್ಯವಸ್ಥೆ ರೂಪುಗೊಳ್ಳಲಿದ್ದು, ಎರಡೂ ನಗರಗಳ ಅಭಿವೃದ್ಧಿಗೆ ಪ್ರತ್ಯೇಕ ಅನುದಾನ ಮತ್ತು ಯೋಜನೆಗಳನ್ನು ಜಾರಿಗೊಳಿಸುವ ಸಾಧ್ಯತೆಗಳು ಹೆಚ್ಚಾಗಿವೆ.
ಪಾಲಿಕೆಗಳ ವಿಭಜನೆಯ ಬಳಿಕ ಸರ್ಕಾರ ಅಭಿವೃದ್ಧಿ ಅನುದಾನ ಹಂಚಿಕೆಯಲ್ಲಿ ಯಾವುದೇ ತಾರತಮ್ಯ ಮಾಡದೆ ಎರಡೂ ನಗರಗಳಿಗೆ ಸಮರ್ಪಕ ನೆರವು ನೀಡಬೇಕು ಎಂದು ಮೇಯರ್ ಜ್ಯೋತಿ ಪಾಟೀಲ್ ಒತ್ತಾಯಿಸಿದ್ದಾರೆ.



