ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ನೂತನ ಸರ್ಕಾರದಲ್ಲಿ ಗದಗ ಜಿಲ್ಲೆಯ ರೋಣ ಕ್ಷೇತ್ರದ ಹಿರಿಯ ಶಾಸಕ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕೆಂದು ಗದಗ ಜಿಲ್ಲಾ ವಿಕಾಸ ವೇದಿಕೆಯ ವಿಶ್ವನಾಥ ಖಾನಾಪೂರ ಅವರು ಆಗ್ರಹಿಸಿದ್ದಾರೆ.
ಈ ಕುರಿತು ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಿದ್ದಾರೆ.
ಉತ್ತರ ಕರ್ನಾಟಕದ ಪ್ರಭಾವಿ ಸಚಿವರಾದ ಹೆಚ್. ಕೆ. ಪಾಟೀಲ ಅವರ ಜೊತೆಗೆ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಜಿ.ಎಸ್. ಪಾಟೀಲರು ಹಿರಿಯ ಹಾಗೂ ಅನುಭವಿ ಶಾಸಕರಾಗಿದ್ದು, ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಿನ್ನೆಲೆ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಜಿ.ಎಸ್. ಪಾಟೀಲರ ಕುಟುಂಬ ರಾಜಕೀಯ ಹಾಗೂ ಆಡಳಿತ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದೆ. ಜೆ.ಎಚ್. ಪಟೇಲರ ಮುಖ್ಯ ಕಾರ್ಯದರ್ಶಿಯಾಗಿ ಬಿ.ಎಸ್. ಪಾಟೀಲರು ಸೇವೆ ಸಲ್ಲಿಸಿದ್ದು, ಗದಗ ಜಿಲ್ಲಾ ರಚನೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದು ಹೇಳಿದರು.
ಇದೇ ಕುಟುಂಬದ ಆರ್.ಎಸ್. ಪಾಟೀಲರು ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿಯೂ, ಬಾಗಲಕೋಟ ಲೋಕಸಭಾ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಐ.ಎಸ್. ಪಾಟೀಲರು ರೋಣ ಎಪಿಎಂಸಿ ಅಧ್ಯಕ್ಷರಾಗಿದ್ದು, ಕೆಸಿಸಿ ಬ್ಯಾಂಕ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.
ಅಖಂಡ ಧಾರವಾಡ ಜಿಲ್ಲೆಯ ಗದಗ, ಹಾವೇರಿ ಹಾಗೂ ಧಾರವಾಡ ಭಾಗದಲ್ಲಿ ಈ ಕುಟುಂಬ ತನ್ನದೇ ಆದ ಪ್ರಭಾವ ಹೊಂದಿದ್ದು, ರಾಜಕೀಯ ಅನುಭವದ ಮೂಲಕ ರಾಜ್ಯ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಬಲ್ಲ ಸಾಮರ್ಥ್ಯ ಜಿ.ಎಸ್ ಪಾಟೀಲ ಅವರಿಗಿದೆ ಎಂದು ವಿಶ್ವನಾಥ ಖಾನಾಪೂರ ಅಭಿಪ್ರಾಯಪಟ್ಟಿದ್ದಾರೆ.
ಈ ಬಾರಿ ಸಚಿವ ಸಂಪುಟದಲ್ಲಿ ಜಿ.ಎಸ್. ಪಾಟೀಲರಿಗೆ ಸ್ಥಾನ ನೀಡುವುದು ಗದಗ ಜಿಲ್ಲೆಯ ಜನರ ಆಶಯವಾಗಿದೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
“ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಿ.ಎಸ್. ಪಾಟೀಲರಿಗೆ ಈ ಬಾರಿ ಸಚಿವ ಸ್ಥಾನ ನೀಡುವುದು ಗದಗ ಜಿಲ್ಲೆಯ ಜನರ ಒತ್ತಾಸೆಯಾಗಿದೆ.”ವಿಶ್ವನಾಥ ಖಾನಾಪೂರ, ಅಧ್ಯಕ್ಷರು, ಗದಗ ಜಿಲ್ಲಾ ವಿಕಾಸ ವೇದಿಕೆ



