ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ತಾಲೂಕಿನ ಹಂಪಾಪಟ್ಟಣ ಗ್ರಾಮದಲ್ಲಿ ಬೀದಿ ನಾಯಿಯೊಂದು ಸರಣಿ ದಾಳಿ ನಡೆಸಿ ಏಳು ಮಂದಿಗೆ ಗಾಯಪಡಿಸಿದ ಘಟನೆ ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ.
ಗುರುವಾರ ಸಂಜೆ ಸುಮಾರು 4 ಗಂಟೆ ವೇಳೆಗೆ ಗ್ರಾಮದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಜನರ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿ, ಮೂವರಿಗೆ ಕಚ್ಚಿ ಗಾಯಪಡಿಸಿದೆ. ಬಳಿಕ ಅದೇ ರಾತ್ರಿ ಇನ್ನೂ ಮೂವರ ಮೇಲೆ ದಾಳಿ ನಡೆಸಿದ್ದು, ಶುಕ್ರವಾರ ಮುಂಜಾನೆ ಮತ್ತೊಬ್ಬ ಯುವಕನಿಗೂ ನಾಯಿ ಕಚ್ಚಿರುವುದಾಗಿ ತಿಳಿದು ಬಂದಿದೆ.
ಹೀಗೆ ಎರಡು ದಿನಗಳ ಅವಧಿಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಗ್ರಾಮದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡ ಕೆಲವರನ್ನು ಹೆಚ್ಚಿನ ಚಿಕಿತ್ಸೆಗೆ ಕೊಪ್ಪಳ ಆಸ್ಪತ್ರೆಗೆ ರವಾನಿಸಲಾಗಿದೆ.
ನಾಯಿಯ ದಾಳಿಯಿಂದ ಗ್ರಾಮಸ್ಥರು ಭಯಭೀತರಾಗಿದ್ದು, ಸ್ಥಳೀಯರು ನಾಯಿಯನ್ನು ಓಡಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಬೀದಿ ನಾಯಿಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.



