ಬೆಂಗಳೂರು: ಬಹುಕೋಟಿ ರೂಪಾಯಿ ಮೌಲ್ಯದ ಬಿಟ್ಕಾಯಿನ್ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ಗೆ ಜಾರಿ ನಿರ್ದೇಶನಾಲಯ (ಇಡಿ) ಮತ್ತೊಮ್ಮೆ ಸಮನ್ಸ್ ಜಾರಿಗೊಳಿಸಿದೆ. ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ಸೂಚನೆ ನೀಡಿದ್ದು, ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ.
ಈ ಹಿಂದೆ ಕಳೆದ ಶುಕ್ರವಾರವೇ ನಲಪಾಡ್ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿತ್ತು. ಆದರೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆ ಅವರಿಗೆ ತಾತ್ಕಾಲಿಕ ವಿನಾಯಿತಿ ನೀಡಲಾಗಿತ್ತು. ಇದೀಗ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಹೊಸ ಸಮನ್ಸ್ ಜಾರಿಯಾಗಿದೆ.
ಬಿಟ್ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ಬಂಧಿಸಿರುವ ಇಡಿ, ಪ್ರಕರಣದ ವಿವಿಧ ಆಯಾಮಗಳ ಕುರಿತು ಮಾಹಿತಿ ಸಂಗ್ರಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ನಲಪಾಡ್ ಅವರಿಂದಲೂ ಮಹತ್ವದ ಮಾಹಿತಿ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಬೆಂಗಳೂರಿನ ಅಶೋಕನಗರದಲ್ಲಿರುವ ಮೊಹಮ್ಮದ್ ನಲಪಾಡ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಸತತ 21 ಗಂಟೆಗಳ ಕಾಲ ಶೋಧ ಕಾರ್ಯ ಕೈಗೊಂಡಿದ್ದರು. ಶೋಧದ ವೇಳೆ ಹಾರ್ಡ್ಡಿಸ್ಕ್ಗಳು, ವಿದೇಶಿ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ಬ್ಯಾಂಕ್ ದಾಖಲೆಗಳು ಸೇರಿದಂತೆ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಕೆಲ ವರ್ಷಗಳ ಹಿಂದೆ ರಾಜ್ಯದಲ್ಲಿ ಬಿಟ್ಕಾಯಿನ್ ಹಗರಣ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣದಲ್ಲಿ ಕೆಲವು ಪ್ರಭಾವಿ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಹೆಸರುಗಳು ಕೇಳಿಬಂದಿದ್ದವು. ಹಗರಣದ ಪ್ರಮುಖ ಆರೋಪಿ ಹಾಗೂ ಅಂತಾರಾಷ್ಟ್ರೀಯ ಹ್ಯಾಕರ್ ಎಂದು ಗುರುತಿಸಲ್ಪಟ್ಟಿದ್ದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಬಳಿಕ ಅವರನ್ನು ಬಿಡುಗಡೆ ಮಾಡಲಾಗಿತ್ತು.
ಪ್ರಸ್ತುತ ಇಡಿ ತನಿಖೆಯನ್ನು ಮುಂದುವರಿಸಿದ್ದು, ಸೋಮವಾರ ನಡೆಯಲಿರುವ ನಲಪಾಡ್ ವಿಚಾರಣೆ ಪ್ರಕರಣದಲ್ಲಿ ಹೊಸ ಬೆಳವಣಿಗೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ.



