ಬೆಳ್ತಂಗಡಿ: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಸಾಂಪ್ರದಾಯಿಕ ಉಡುಪಿನಲ್ಲಿ ದೇವಾಲಯಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳು, ದೇವರ ಆಶೀರ್ವಾದ ಪಡೆದು ಕೆಲಕಾಲ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಬಳಿಕ ಅನ್ನಪೂರ್ಣ ಛತ್ರಕ್ಕೆ ಭೇಟಿ ನೀಡಿ, ಭಕ್ತರಿಗೆ ನೀಡಲಾಗುತ್ತಿರುವ ಅನ್ನದಾನ ಸೇವೆ ಹಾಗೂ ಅಲ್ಲಿನ ವ್ಯವಸ್ಥೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಅನಂತರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಕ್ಷೇತ್ರದಲ್ಲಿ ನಡೆಯುತ್ತಿರುವ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಮತ್ತು ಆರೋಗ್ಯ ಸೇವಾ ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದರು.
ಧರ್ಮಸ್ಥಳದ ಮೂಲಕ ಸಮಾಜದ ವಿವಿಧ ವರ್ಗಗಳಿಗೆ ನೀಡಲಾಗುತ್ತಿರುವ ಸೇವೆಗಳು ಮಾದರಿಯಾಗಿವೆ ಎಂದು ಶ್ಲಾಘಿಸಿದ ಉಪರಾಷ್ಟ್ರಪತಿಗಳು, ಕ್ಷೇತ್ರದ ಜನಪರ ಕಾರ್ಯಗಳನ್ನು ಕೊಂಡಾಡಿದರು. ಈ ಸಂದರ್ಭದಲ್ಲಿ ಹೆಗ್ಗಡೆ ಕುಟುಂಬದ ಸದಸ್ಯರು ಹಾಗೂ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.



